ಜಮಖಂಡಿ: ಕಳೆದ ತಿಂಗಳಲ್ಲಿ ಕೃಷ್ಣೆಯ ಪ್ರವಾಹದಿಂದಾಗಿ ಈ ಭಾಗದ ಸಾವಿರಾರು ಜನರು ಮನೆ, ಆಸ್ತಿ, ಜಾನುವಾರುಗಳನ್ನು ಕಳೆದುಕೊಂಡಿದ್ದು, ರಾಜ್ಶ ಸರ್ಕಾರ ಇದುವರೆಗೂ ಸರಿಯಾದ ರೀತಿಯಲ್ಲಿ ಪರಿಹಾರ ನೀಡಿಲ್ಲ. ಪ್ರವಾಹ ಪೀಡಿತರ ಕಷ್ಟಗಳಿಗೆ ಸರಿಯಾಗಿ ಸ್ಪಂದಿಸದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಜಮಖಂಡಿ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಜಮಖಂಡಿ ಕ್ಷೇತ್ರದ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಈ ಪ್ರತಿಭಟನೆ, ಹನುಮಾನ ಚೌಕ, ಪೋಸ್ಟ್ ಚೌಕ್, ಸುವರ್ಣ ಥಿಯೇಟರ್ ಚೌಕ್ ಮೂಲಕ ದೇಸಾಯಿ ಸರ್ಕಲ್ವರೆಗೆ ಸಾಗಿತು. ಬಳಿಕ ದೇಸಾಯಿ ಸರ್ಕಲ್ನಲ್ಲಿ ಟೈರ್ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯ ನಂತರ ಜಮಖಂಡಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಶೀಘ್ರವೇ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಕೈ ಬಿಟ್ಟರು.