ಬಾಗಲಕೋಟೆ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಂಡ ಜನ ಜಾಗೃತಿ ಅಭಿಯಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ಜನ ಜಾಗೃತಿ ಅಭಿಯಾನಕ್ಕೆ ಕಲ್ಪನಾ ಕುಲಕರ್ಣಿ ಚಾಲನೆ ನೀಡಿ ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಟ ಪದ್ಧತಿಯಾಗಿ ಪರಿಣಮಿಸಿದ್ದು, ಇದನ್ನು ತೊಲಗಿಸಲು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಅನಕ್ಷರತೆ, ಅಜ್ಞಾನ, ಬಡತನದಿಂದ 14 ವರ್ಷದೊಳಗಿನ ಲಕ್ಷಾಂತರ ಮಕ್ಕಳು ಅಲ್ಪಸಂಭಾವನೆಗಾಗಿ ದೇಹ ಸವೆಸುತ್ತಿರುವುದನ್ನು ನೋಡಿದರೆ ಕಲ್ಲು ಹೃದಯದವರನ್ನು ಕರಗಿಸುತ್ತದೆ. ಆಟ, ಊಟ, ಪಾಠಗಳಲ್ಲಿ ನಕ್ಕು ನಲಿಯಬೇಕಾದ ಮಕ್ಕಳು ಕೆಲಸ ಮಾಡುತ್ತಿದ್ದು, ತಮ್ಮ ಬಾಲ್ಯದ ಹಕ್ಕನ್ನು ಪಡೆದುಕೊಳ್ಳುವಂತಾಗಬೇಕು. ಹಾಗಾಗಿ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಿಗೆ ಅರಿವು ಮೂಡಿಸಿ, ಮಕ್ಕಳನ್ನು ಶಾಲೆಗೆ ಸೇರಿಸಿ ಭವ್ಯ ಭವಿಷ್ಯ ನೀಡಲು ಪಾಲಕರಲ್ಲಿ, ಸಾರ್ವಜನಿಕರಲ್ಲಿ ಜಾಗೃತಿ
ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಜಾಗೃತಿ ಅಭಿಯಾನ ಅವಶ್ಯವಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆಯನ್ವಯ 14 ರಿಂದ 18 ವರ್ಷದ ಒಳಗಿನ ಮಕ್ಕಳನ್ನು ಅಪಾಯಕಾರಿ ವೃತ್ತಿ, ಪ್ರಕ್ರಿಯೆಗಳಲ್ಲಿ ಉದ್ಯೋಗ ಮಾಡಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕಾನೂನು ಮೀರಿ ಕೆಲಸಕ್ಕೆ ನೇಮಿಸಿಕೊಂಡಲ್ಲಿ 1 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ಗಳವರೆಗೆ ದಂಡ ವಿಧಿಸಲಾಗುತ್ತಿದೆ. ಹಾಗಾಗಿ ಅಭಿಯಾನದ ಮೂಲಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕಲ್ಪನಾ ಕುಲಕರ್ಣಿ ಹೇಳಿದರು.