ದೊಡ್ಡಬಳ್ಳಾಪುರ: ಬಿಜೆಪಿ ಪಕ್ಷದ ಸಾಧನಾ ಸಮಾವೇಶಕ್ಕೆ ಗಣ್ಯರು ಆಗಮಿಸುತ್ತಿರುವ ಹಿನ್ನೆಲೆ ಇಲ್ಲಿನ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಜೆಸಿಬಿ ಮೂಲಕ ಕ್ರೀಡಾಂಗಣದಲ್ಲಿ ಹಳ್ಳ ಅಗೆದು ಕ್ರೀಡಾಂಗಣ ವಿರೂಪಗೊಳಿಸಲಾಗಿದೆ.
ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಾಗಿ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ಬೃಹತ್ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಜುಲೈ 28 ರಂದು ನಡೆಯುವ ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವರು, ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಇಡೀ ಸಚಿವ ಸಂಪುಟದ ಸಚಿವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇವರೆಲ್ಲ ಹೆಲಿಕಾಪ್ಟರ್ ಮೂಲಕ ಇಲ್ಲಿಗೆ ಆಗಮಿಸಲಿದ್ದು, ಈ ಹಿನ್ನೆಲೆ ನಗರದ ಭಗತ್ ಸಿಂಗ್ ಕ್ರೀಡಾಂಗಣವನ್ನು ಅಗೆಯಲಾಗಿದೆ.
ಇನ್ನು ಖೇಲೋ ಇಂಡಿಯಾ ಕಾರ್ಯಕ್ರಮದ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಇದೇ ಸರ್ಕಾರ ಕ್ರೀಡಾಂಗಣಗಳ ವಿಕೃತಿಗೆ ಕೈಹಾಕಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 10 ವರ್ಷಗಳ ಹಿಂದೆ ದುಃಸ್ಥಿತಿಯಲ್ಲಿದ್ದ ಕ್ರೀಡಾಂಗಣವನ್ನು ಸಾರ್ವಜನಿಕರು ಸೇರಿ ಅಭಿವೃದ್ಧಿಪಡಿಸಿದ್ದಾರೆ.
ನಿತ್ಯ ನೂರಾರು ಕ್ರೀಡಾಪಟುಗಳು ಇಲ್ಲಿ ತರಬೇತಿ ಪಡೆಯುತ್ತಿದ್ದರು. ಭವಿಷ್ಯದ ಕ್ರೀಡಾಪಟುಗಳ ತಯಾರಿಗೆ ಬೇಕಾಗಿರುವ ಕ್ರೀಡಾಂಗಣವನ್ನು ವಿರೂಪಗೊಳಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಓದಿ : ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿ ಇಂದಿಗೆ ವರ್ಷ..