ದೇವನಹಳ್ಳಿ: ಕಾಂಗ್ರೆಸ್ ನಾಯಕರು 60 ವರ್ಷಗಳಿಂದ ಓಲೈಕೆ ರಾಜಕಾರಣವನ್ನೇ ಮಾಡಿಕೊಂಡು ಬಂದಿದ್ದಾರೆ. ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡಿದೆ ಹೊರತು ಡಿಗ್ನಿಫೈ ಪಾಲಿಟಿಕ್ಸ್ ಮಾಡಿದ ಅಭ್ಯಾಸವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದರು.
ದೇವನಹಳ್ಳಿಯ ಸಮೀಪದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರಗತಿಯ ಪ್ರತಿಮೆ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಯ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ನಿರ್ಮಾಣದ ಚಿಂತನೆಯನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚರ್ಚೆಗೆ ತಂದಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಚ್ಛಾಶಕ್ತಿಯಿಂದ ಇಂತಹ ಸುಂದರ ಐತಿಹಾಸಿಕ ಪ್ರತಿಮೆ ನಿರ್ಮಾಣವಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆ, ವಿಮಾನ ನಿಲ್ದಾಣದ ಟರ್ಮಿನಲ್ - 2, ವಂದೇ ಭಾರತ್ ರೈಲು ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಮುನ್ನ ಸ್ಥಳ ಪರಿಶೀಲನೆ ಮಾಡಿ, ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ನೀಡಿರುವುದನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಕ್ರಮವನ್ನು ತರಲು ಬಿಜೆಪಿಗೆ ಮಾತ್ರ ಸಾಧ್ಯವಾಗುತ್ತದೆ. ಇಂತಹ ಆಲೋಚನೆಗಳು ಕಾಂಗ್ರೆಸ್ ಅಥವಾ ಜೆಡಿಎಸ್ ಬರಲು ಸಾಧ್ಯವಿಲ್ಲ ಎಂದರು.
ಇದೇ ವೇಳೆ ಬಿಜೆಪಿ ಎಂದಿಗೂ ಯಾವುದೇ ಸಮುದಾಯ, ಜಾತಿ, ಧರ್ಮ, ಲಿಂಗದ ಆಧಾರಿತವಾಗಿ ಯೋಜನೆಗಳನ್ನು ರೂಪಿಸಲು ಮುಂದಾಗುವುದಿಲ್ಲ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡಿಕೊಂಡು ಬಂದಿದೆ. ಈಗಲೂ ಅದನ್ನೇ ಮುಂದುವರಿಸುತ್ತಿದೆ. ಶ್ರೇಷ್ಠವಾದ ರಾಜಕಾರಣವನ್ನು ಅವರು ಎಂದೂ ಮಾಡಿಲ್ಲ ಎಂದರು.
ಇದನ್ನೂ ಓದಿ: ನನ್ನ ಹೇಳಿಕೆ ತಪ್ಪು ಅಂತಾ ಸಾಬೀತಾದ್ರೆ ರಾಜಕೀಯ ನಿವೃತ್ತಿಗೆ ಸಿದ್ಧ: ಬಿಜೆಪಿಗೆ ಸತೀಶ್ ಜಾರಕಿಹೊಳಿ ಸವಾಲು
ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸತೀಶ್ ಜಾರಕಿಹೊಳಿ ಇತಿಹಾಸದ ಬಗ್ಗೆ ಇರುವ ತಮ್ಮ ತಪ್ಪು ಕಲ್ಪನೆಯನ್ನು ಪ್ರದರ್ಶನ ಮಾಡಿದ್ದಾರೆ. ಹಿಂದೂ ಪದದ ಬಗ್ಗೆ, ಹಿಂದುತ್ವದ ಬಗ್ಗೆ, ದೇಶದ ಇತಿಹಾಸದ ಬಗ್ಗೆ ಅವರು ಪರಿಚಯ ಮಾಡಿಕೊಂಡು, ಅರಿವು ಮೂಡಿಸಿಕೊಳ್ಳುವ ಕೆಲಸ ಮಾಡಬೇಕಾಗುತ್ತದೆ. ಇಡೀ ವಿಶ್ವದಲ್ಲಿ ಹಿಂದೂ ಧರ್ಮದ ಬಗ್ಗೆ ವಿಶೇಷ ಗೌರವ ಇದೆ. ಸನಾತನ ಹಿಂದೂ ಧರ್ಮ ಒಂದು ಜೀವನಶೈಲಿ. ಇದು ಅತಿ ಉನ್ನತ ಆದರ್ಶವಾಗಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬಹಿರಂಗ ಆಹ್ವಾನ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನವರ ರಾಜಕೀಯ ಮಾತುಗಳನ್ನುಗಂಭೀರವಾಗಿ ಪರಿಗಣಿಸಬಾರದು. ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಕಾಂಗ್ರೆಸ್ನವರಿಗೂ ಸ್ವಾಗತ ನೀಡುತ್ತೇವೆ ಎಂದು ನಾವು ಕೂಡ ಹೇಳುತ್ತೇವೆ. ಕಾಂಗ್ರೆಸ್ನವರು ಲೋಕಾರೂಢಿಯಾಗಿ ಹೇಳಿದ್ದಾರೆ ಎಂದರು.
ಅನ್ಯಪಕ್ಷಗಳಿಂದ ಬಂದವರ ಜೊತೆಗೆ ಬಿಜೆಪಿಗೆ ಇನ್ನಷ್ಟು ನಾಯಕರು ಸೇರ್ಪಡೆಯಾಗುತ್ತಾರೆಯೇ ಹೊರತು, ಮೈನಸ್ ಆಗುವುದಿಲ್ಲ. ಹಿರಿಯ ಐಎಎಸ್ ಅಧಿಕಾರಿ, ಇಬ್ಬರು ಮಾಜಿ ಸಂಸದರು, ಕೋಲಾರ ಜಿಲ್ಲೆಯ ಇಬ್ಬರು ಮಾಜಿ ಶಾಸಕರು, ಚಿಕ್ಕಬಳ್ಳಾಪುರದಲ್ಲಿ ಒಬ್ಬ ಮಾಜಿ ಶಾಸಕರು ಬಿಜೆಪಿಗೆ ಬಂದಿದ್ದಾರೆ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡರು ಮೊದಲು ದೇಶದ ವೇದ, ಶಾಸ್ತ್ರಗಳ ಬಗ್ಗೆ ತಿಳಿದುಕೊಳ್ಳಲಿ: ಅರುಣ್ ಸಿಂಗ್