ದೇವನಹಳ್ಳಿ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆ ತಲೆ ಎತ್ತಲಿದ್ದು, ಜೂ.27ರಂದು ಪ್ರತಿಮೆ ನಿರ್ಮಾಣದ ಭೂಮಿ ಪೂಜೆ ನೆರೆವೇರಲಿದೆ ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ/ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಈ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ.27ರಂದು ಕೆಂಪೇಗೌಡರ 511ನೇ ಜಯಂತಿ ಇದೆ. ಅಂದೇ ಭೂಮಿ ಪೂಜೆ ಇಟ್ಟುಕೊಂಡಿದ್ದು, ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆ ಚರ್ಚಿಸಿದ ನಂತರ ಅಂತಿಮಗೊಳಿಸಲಾಗುವುದು ಎಂದರು.
ವಿಧಾನಸೌಧ ಮತ್ತು ವಿಕಾಸಸೌಧದ ಮಧ್ಯೆ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ನಿರ್ಮಾಣ ಮಾಡಿದ ಖ್ಯಾತ ಕಲಾವಿದ ಅನಿಲ್ ರಾಮಸುತಾರ್ ಅವರಿಗೆ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೂ ಗುತ್ತಿಗೆ ನೀಡಲಾಗುತ್ತಿದೆ. ಸದ್ಯದಲ್ಲೇ ಅವರೊಟ್ಟಿಗೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ. ಪ್ರತಿಮೆ ನಿರ್ಮಾಣಕ್ಕೆ ಅಂದಾಜು 66 ಕೋಟಿ ರೂ. ಬೇಕು. ಪ್ರತಿಮೆಯ ಮಾದರಿ ಸಿದ್ಧವಾಗಿದ್ದು, ಅದನ್ನು ಸಿಎಂಗೆ ತೋರಿಸಿದ ನಂತರ ಅಂತಿಮಗೊಳಿಸಲಾಗುವುದು. ಈ ಕಾಮಗಾರಿಯನ್ನು ಒಂದು ವರ್ಷದಲ್ಲಿ ಮುಗಿಸುವ ಉದ್ದೇಶ ಇದೆ ಎಂದರು.
ಪ್ರತಿಮೆ ನಿರ್ಮಾಣ ಸ್ಥಳಕ್ಕೆ ವಿಮಾನ ನಿಲ್ದಾಣದ ಮುಂದಿನ 23 ಎಕರೆ ಜಾಗ ಗುರುತಿಸಿದ್ದು, ಅಲ್ಲಿ ಕಾಮಗಾರಿ ಆರಂಭಿಸುವುದಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ಒಪ್ಪಿಗೆಯೂ ನೀಡಿದೆ. ಪ್ರತಿಮೆ ಸುತ್ತಲಿನ ಪ್ರದೇಶವನ್ನು ವಿಶೇಷ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಒಟ್ಟಾರೆ 80 ಕೋಟಿ ರೂ. ಖರ್ಚು ಮಾಡುತ್ತಿದ್ದು, ಪ್ರಮುಖ ಆಕರ್ಷಣೆಗಳಲ್ಲಿ ಇದು ಕೂಡ ಒಂದಾಗಲಿದೆ ಎಂದರು.
ಸಮಾಧಿ ಅಭಿವೃದ್ಧಿ:
ಮಾಗಡಿ ತಾಲೂಕಿನ ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿ ಇದ್ದು, ಅದರ ಅಭಿವೃದ್ಧಿಗೆ 41 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧಪಡಿಸಲಾಗಿದೆ. ಸಮಾಧಿ ಜತೆಗೆ ಅದರ ಸುತ್ತಲಿನ ಪ್ರದೇಶ ಮತ್ತು ಊರಿನ ಕೆರೆಯನ್ನು ಕೂಡ ಅಭಿವೃದ್ಧಿಪಡಿಸಲಾಗುವುದು. ಈ ಸಲುವಾಗಿ ಭೂಸ್ವಾಧೀನ ಮಾಡುತ್ತಿದ್ದು, ಇದಕ್ಕೆ ಅಂದಾಜು 17 ಕೋಟಿ ರೂ. ಬೇಕಾಗುತ್ತದೆ. ಈ ಎರಡೂ ಯೋಜನೆಗಳಿಗೆ ಐಡೆಕ್ ಸಂಸ್ಥೆ, ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಿದೆ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮೂಲಸೌಲಭ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಉಪ ಮುಖ್ಯಮಂತ್ರಿಯ ಕಾರ್ಯದರ್ಶಿ ಪಿ. ಪ್ರದೀಪ್, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿ.ಶ್ರಿನಿವಾಸಗೌಡ ಹಾಜರಿದ್ದರು.