ದೇವನಹಳ್ಳಿ : ಬೆಳಗಾವಿಯ ಯುವಕ್ರಾಂತಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆಗಮಿಸಲಿದ್ದಾರೆ. ಅವರು ಬಂದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಸಂಬಂಧ ಹಾಲಿ ಶಾಸಕರಿಗೆ ಯಾವುದೇ ಸಮಸ್ಯೆ ಇಲ್ಲ. ಇಬ್ಬರು ಶಾಸಕರು ಸ್ವತಃ ತಾವೇ ನಿಲ್ಲುವುದಿಲ್ಲ ಎಂದು ಬೇರೆಯವರನ್ನು ಸೂಚಿಸಿದ್ದಾರೆ. ಹಾಲಿ 7 ಜನ ಶಾಸಕರಿಗೆ ಟಿಕೆಟ್ ಇಲ್ಲ ಎಂಬುದು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದರು.
ಬೆಳಗಾವಿಯ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಯವರು ಆಗಮಿಸುತ್ತಿದ್ದಾರೆ. ಅವರು ಬಂದ ಮೇಲೆ ಅಭ್ಯರ್ಥಿಗಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದರು. ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ, ಈ ಬಗ್ಗೆ ಅವರನ್ನೇ ಕೇಳಿ ಎಂದು ಪ್ರತಿಕ್ರಿಯಿಸಿದರು.
ಡಿ ಕೆ ಶಿವಕುಮಾರ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ಅವರಿಗೆ ಸ್ವಾಗತ ಕೋರಿದರು. ಬಳಿಕ ವಿಮಾನ ನಿಲ್ದಾಣದ ಮುಖ್ಯ ದ್ವಾರದ ಬಳಿ ದೇವನಹಳ್ಳಿ ಮತ್ತು ಬಸವಕಲ್ಯಾಣ ಕ್ಷೇತ್ರದ ಆಕಾಂಕ್ಷಿಗಳಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಮತ್ತು ಆಕಾಂಕ್ಷಿ ಶಾಂತಕುಮಾರ್ ಜೊತೆ ಮಾತುಕತೆ ನಡೆಸಿದರು. ಟಿಕೆಟ್ ಬಗ್ಗೆ ಚರ್ಚೆ ನಡೆಸಿದ ಬಳಿಕ ವಿಮಾನ ನಿಲ್ದಾಣದಿಂದ ಡಿ ಕೆ ಶಿವಕುಮಾರ್ ತೆರಳಿದರು.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ 125 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ನ ಕೇಂದ್ರ ಚುನಾವಣೆ ಸಮಿತಿ ಅಂತಿಮಗೊಳಿಸಿದೆ. ಮಾರ್ಚ್ 22ರ ಯುಗಾದಿ ಹಬ್ಬದಂದು ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದೆ.
ನವದೆಹಲಿಯಲ್ಲಿ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣೆ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ 224 ಕ್ಷೇತ್ರಗಳ ಪೈಕಿ 125 ಅಭ್ಯರ್ಥಿಗಳ ಹೆಸರನ್ನು ಸುದೀರ್ಘ ಚರ್ಚೆಯ ಬಳಿಕ ಅಂತಿಮಗೊಳಿಸಲಾಗಿದೆ. ಇನ್ನು ಈ ಅಭ್ಯರ್ಥಿ ಆಯ್ಕೆ ಕುರಿತ ಸಭೆ ಬಳಿಕ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿ ಈ ಬಗ್ಗೆ ಮಾಹಿತಿ ನೀಡಿದೆ. ಒಟ್ಟು 125 ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗಿದ್ದು, ಮಾರ್ಚ್ 22 ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಕಾಂಗ್ರೆಸ್ ಪಕ್ಷದ ಬಹುತೇಕ ಹಾಲಿ ಶಾಸಕರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಚುನಾವಣೆಯಲ್ಲಿ ಸೋಲುವ ಸಾಧ್ಯತೆ ಇರುವ ಕೆಲ ಹಾಲಿ ಶಾಸಕರಿಗೆ ಟಿಕೆಟ್ ನೀಡದಿರಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಕೆಲ ಕ್ಷೇತ್ರಗಳ ಹಾಲಿ ಶಾಸಕರಿಗೆ ಟಿಕೆಟ್ ದೊರೆಯುವುದು ಅನುಮಾನ ಎಂಬುದು ಮೂಲಗಳಿಂದ ಮಾಹಿತಿಯಾಗಿದೆ.
ಇದನ್ನೂ ಓದಿ : ವಿಧಾನಸಭೆ ಚುನಾವಣೆಗೆ 125 ಕೈ ಕಲಿಗಳ ಲಿಸ್ಟ್ ಅಂತಿಮ.. ಬೆರಳೆಣಿಕೆ ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ..!