ಬೆಂಗಳೂರು: ಜನರಲ್ಲಿ ಮತದಾನದ ಅರಿವು ಮೂಡಿಸಲು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮತದಾನದ ಹಬ್ಬ ಆಚರಣೆ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲತಾ ನೇತೃತ್ವದಲ್ಲಿ ಮತದಾನದ ಹಬ್ಬವನ್ನು ಸಂಭ್ರಮ ಸಡಗರ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ತ್ರಿಚಕ್ರ ವಾಹನಗಳ ಜಾಥಾ, ಕಾಲ್ನಡಿಗೆ ಜಾಥಾ, ರಂಗೋಲಿ ಸ್ಪರ್ಧೆ, ಮಾನವ ಸರಪಳಿ, ಮತದಾರರ ಪ್ರತಿಜ್ಞಾವಿಧಿ ಸ್ವೀಕಾರ ಹಾಗೂ ಹಲವು ಕಾರ್ಯಕ್ರಮವನ್ನು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮತದಾನದ ಮಹತ್ವ, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಇತರೆ ಉತ್ತಮ ವಿಷಯಗಳ ಕುರಿತು ಸಂದೇಶವನ್ನು ಸಾರಲಾಯಿತು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲತಾ ಅವರು ಸಾಂವಿಧಾನಾತ್ಮಕವಾಗಿ ಪಡೆದಿರುವ ಮತದಾನದ ಹಕ್ಕನ್ನು ಏಪ್ರಿಲ್ 18 ರಂದು ತಪ್ಪದೇ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ತಿಳಿಸಿದರು.
ವಿಶ್ವದಲ್ಲೇ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತ ದೇಶದ ಭವಿಷ್ಯವನ್ನು ನಿರ್ಧರಿಸುವವರು ಜನರೇ ಎಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು, ಜನರಿಂದ, ಜನರಿಗಾಗಿ ಹಾಗೂ ಜನರಿಗೂಸ್ಕರ ರಚನೆಯಾಗಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಟಗೊಳಿಸಬೇಕು ಎಂದು ಹೇಳಿದರು.