ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸುವ ಬಗ್ಗೆ ಬಿಬಿಎಂಪಿ ಆಯುಕ್ತರ ಮಂಜುನಾಥ್ ಪ್ರಸಾದ್ ಅವರು ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಾಗ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿರುವ ಮಂದಿರ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ಸಮಗ್ರವಾಗಿ ಸಮೀಕ್ಷೆ ನಡೆಸಿ ಫೆಬ್ರವರಿ 15ಕ್ಕೆ ನಿಖರ ವರದಿ ನೀಡುವಂತೆ ಆಯುಕ್ತರು ಗಡುವು ನೀಡಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು, ಸೆಪ್ಟೆಂಬರ್ 29 , 2009ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಬೇಕೆಂಬ ಆದೇಶವಾಗಿದೆ. ಈ ಆದೇಶದಲ್ಲಿ 2009ರ ಮುನ್ನ ನಿರ್ಮಿಸಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವುದು ಅಥವಾ ಸ್ಥಳಾಂತರ ಮಾಡುವುದು ಅಥವಾ ಕ್ರಮಬದ್ಧವಾಗಿದೆ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುವಂತಹ ಧಾರ್ಮಿಕ ಕಟ್ಟಡಗಳ ಪಟ್ಟಿ ಮಾಡಿ ನೀಡಿದರೆ ಸಮೀಕ್ಷೆ ಆಧಾರದ ಮೇಲೆ ಅವುಗಳನ್ನು ತೆರವುಗೊಳಿಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಸಂಬಂಧಪಟ್ಟವರಿಗೆ ಶೋಕಾಸ್ ನೋಟಿಸ್ ಜಾರಿಮಾಡಿ, ಎಷ್ಟು ಧಾರ್ಮಿಕ ಕೇಂದ್ರಗಳಿಗೆ ನೋಟಿಸ್ ಜಾರಿಮಾಡಲಾಗಿದೆ ಎಂಬ ಪಟ್ಟಿಯನ್ನು ನೀಡಬೇಕು. ನೋಟಿಸ್ ನೀಡಿದ ವಾರದಲ್ಲಿ ಸಮಜಾಯಿಷಿ ಪಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಕಂದಾಯ ಅಧಿಕಾರಿಗಳು ಸ್ಥಳ ಸಮೀಕ್ಷೆ ನಡೆಸಿ ಸಂಬಂಧಪಟ್ಟ ಇಂಜಿನಿಯರ್ಗಳು ಪೊಲೀಸ್ ಭದ್ರತೆಯೊಂದಿಗೆ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು.
ಓದಿ : ‘ಬೆಂದ’ಕಾಳೂರಿನಲ್ಲಿ ಬಿಎಂಟಿಸಿ ನೌಕರರಿಂದ ಪ್ರತಿಭಟನೆ: ಪ್ರಯಾಣಿಕರಿಗೆ ತಟ್ಟಲಿದೆಯಾ ಬಸ್ ಮುಷ್ಕರದ ಎಫೆಕ್ಟ್?
ಈ ಹಿಂದೆ ಮಾಡಿರುವ ಸಮೀಕ್ಷೆಯಲ್ಲಿ ಸರ್ಕಾರಿ ಜಾಗದಲ್ಲಿ 1,588 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂಬ ವರದಿಯನ್ನ ಹೈಕೋರ್ಟ್ ಗೆ ಸಲ್ಲಿಸಲಾಗಿತ್ತು. ಈ ಪೈಕಿ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರು ಅದನ್ನು ಒಪ್ಪದೆ ಸರ್ಕಾರಿ ಹಾಗೂ ಖಾಸಗಿ ಜಾಗದಲ್ಲಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ಸಮಗ್ರವಾಗ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಧಾರ್ಮಿಕ ಕಟ್ಟಡಗಳು ನಿರ್ಮಿಸಿರುವ ಜಾಗ/ಸ್ಥಳದ ದಾಖಲೆ(ಜಮೀನಿನ ಕಾಗದ ಪತ್ರ) ಹಾಗೂ ಧಾರ್ಮಿಕ ಕಟ್ಟಡ ನಿರ್ಮಿಸಲು ಯಾವುದಾದರು ಇಲಾಖೆಯಿಂದ ಅನುಮತಿ ಪಡೆದಿದ್ದಾರೆಯೇ ಎಂಬ ಮಾಹಿತಿ ಸಂಗ್ರಹಿಸಬೇಕು. ಜೊತೆಗೆ ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದೆಯಾ/ಖಾಸಗಿ ಜಾಗದಲ್ಲಿ ನಿರ್ಮಿಸಲಾಗಿದೆಯಾ ಎಂಬುದನ್ನು ಗುರುತಿಸಬೇಕು ಎಂದು ಸೂಚನೆ ನೀಡಿದರು.
ನಗರದಲ್ಲಿ ಬಿಬಿಎಂಪಿ, ಬೆಸ್ಕಾಂ, ಸ್ಮಾರ್ಟ್ ಸಿಟಿ, ಬಿಡಿಎ, ಜಲಮಂಡಳಿ ಸೇರಿದಂತೆ ಇನ್ನಿತರೆ ಯಾವುದೇ ಇಲಾಖೆಯಿಂದ ಕಾಮಗಾರಿಗಳು ನಡೆಯುತ್ತಿದ್ದರೆ ಅಲ್ಲಿ ಕಡ್ಡಾಯವಾಗಿ ಬ್ಯಾರಿಕೇಡ್, ಮಾರ್ಗ ಬದಲಾವಣೆ/ಕಾಮಗಾರಿ ನಡೆಯುವ ನಾಮಫಲಕ, ವಿದ್ಯುತ್ ದೀಪಗಳು ಸೇರಿದಂತೆ ಇನ್ನಿತರೆ ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.