ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಏರ್ಪೋರ್ಟ್ ರಸ್ತೆಯ ಕೋಡಿಗೆಹಳ್ಳಿ ಬಳಿ 3 ಅಡಿಯಷ್ಟು ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಕಾರ್ಯನಿರತ ಹೆಬ್ಬಾಳ ಸಂಚಾರಿ ಪೊಲೀಸ್ ಅಧಿಕಾರಿ ಪ್ರವೀಣ್ ಕುಮಾರ, ಮೂರು ಬಾರಿ NHAIಗೆ ಕರೆ ಮಾಡಿ ಮಾಹಿತಿ ನೀಡಿದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ ಎನ್ನಲಾಗಿದೆ.
ಹೀಗಾಗಿ ಸ್ವತಃ ಪ್ರವೀಣ್ ಕುಮಾರ ಅವರೇ ರಸ್ತೆಗಿಳಿದು ನೀರು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆ ಮತ್ತೊಮ್ಮೆ ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂದು ಪ್ರವೀಣ್ ಕುಮಾರ್ ಮನವಿ ಮಾಡಿದರು.