ಬೆಂಗಳೂರು: ಲಾಕ್ಡೌನ್ ಅವಧಿಯಲ್ಲಿ ಸಿಗರೇಟ್ ವ್ಯಾಪಾರಕ್ಕೆ ಸಹಕಾರ ನೀಡುವುದಾಗಿ ತಿಳಿಸಿ ವ್ಯಾಪಾರಿಗಳಿಂದ ಲಂಚ ಪಡೆದ ಆರೋಪದಡಿ ಎಸಿಪಿ ಪ್ರಭುಶಂಕರ್ ವಿರುದ್ಧ ದಾಖಲಿಸಲಾಗಿರುವ ಎಫ್ಐಆರ್ಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ಬೆಂಗಳೂರಿನ ಕಾಟನ್ ಪೇಟೆ ಠಾಣೆ ಪೊಲೀಸರು ದಾಖಲಿಸಿರುವ ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ರದ್ದುಪಡಿಸುವಂತೆ ಕೋರಿ ಪ್ರಭುಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಹೆಚ್.ಪಿ.ಸಂದೇಶ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ವಾದ ಆಲಿಸಿದ ಪೀಠ, ಎಫ್ಐಆರ್ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ದುರುದ್ದೇಶದಿಂದ ಸುಳ್ಳು ದೂರನ್ನು ನೀಡಲಾಗಿದೆ. ಒಂದೇ ಕೃತ್ಯದ ಮೇಲೆ ಪ್ರತ್ಯೇಕ ಮೂರು ದೂರುಗಳನ್ನು ಸಲ್ಲಿಸಲಾಗಿದ್ದು, ಅವುಗಳ ಆಧಾರದ ಮೇಲೆ 2 ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಪೊಲೀಸರು ದಾಖಲಿಸಿರುವ ಪ್ರಕರಣ ವಸೂಲಿ ಆರೋಪದಡಿ ಬರುವುದಿಲ್ಲ. ಹೀಗಾಗಿ ಎಫ್ಐಆರ್ಗಳಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ: ಲಾಕ್ಡೌನ್ ಅವಧಿಯಲ್ಲಿ ಅಕ್ರಮವಾಗಿ ಸಿಗರೇಟ್ ಮಾರಾಟ ಮಾಡಲು ಅನುಕೂಲ ಮಾಡಿಕೊಡುವುದಾಗಿ ತಿಳಿಸಿ ವ್ಯಾಪಾರಿಗಳಿಂದ 62.5 ಲಕ್ಷ ರೂಪಾಯಿ ಹಣವನ್ನು ಸಿಸಿಬಿ ಎಸಿಬಿ ಪ್ರಭುಶಂಕರ್ ಸ್ವೀಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸಲ್ಲಿಕೆಯಾದ ದೂರುಗಳನ್ನು ಆಧರಿಸಿ ಕಾಟನ್ ಪೇಟೆ ಠಾಣೆ ಪೊಲೀಸರು 2 ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಿದ್ದರು.
ದೂರು ದಾಖಲಾದ ಬಳಿಕ ಅವುಗಳನ್ನು ರದ್ದುಪಡಿಸುವಂತೆ ಕೋರಿ ಎಸಿಪಿ ಪ್ರಭುಶಂಕರ್ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.