ಬೆಂಗಳೂರು : ಬಹುದಿನಗಳ ನಂತರ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಯುವ ಮುಖಂಡರ ಸಭೆ ಕರೆದಿದ್ದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಮಹಾನಗರ ಜೆಡಿಎಸ್ನ ಯುವ ಮುಖಂಡರ ಜೊತೆ ನಿಖಿಲ್ ಚರ್ಚೆ ನಡೆಸಿದರು.

ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಿಧಾನಸಭೆ ಕ್ಷೇತ್ರಗಳ ವಾರ್ಡ್ ವಾರು ಸಂಘಟನಾ ಸಭೆ ನಡೆಸಿದ ಅವರು, ಯುವ ಮುಖಂಡರ ಕುಂದುಕೊರತೆಗಳನ್ನು ಆಲಿಸಿದರು. ಅಲ್ಲದೇ ಎಲ್ಲರೂ ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಎಲ್ಲ ವಾರ್ಡ್ಗಳ ಯುವ ಪದಾಧಿಕಾರಿಗಳಿಗೆ ಸೂಚನೆ ನೀಡಿದರು.
ಕೆಲ ಕ್ಷೇತ್ರಗಳಲ್ಲಿ ಇರುವ ಸಮಸ್ಯೆಗಳನ್ನು ಪಕ್ಷದ ಮುಖಂಡರು, ನಿಖಿಲ್ ಅವರ ಗಮನಕ್ಕೆ ತಂದರು. ಅವನ್ನು ಕೂಡಲೇ ಬಗೆಹರಿಸುವ ಭರವಸೆಯನ್ನು ನಿಖಿಲ್ ಅವರು ನೀಡಿದರು. ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಟಿ ಎ ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ: ರಾಜ್ಯಸಭೆ ಚುನಾವಣೆ ಹಿನ್ನೆಲೆ : ಜೆಡಿಎಸ್ ಶಾಸಕರಿಗೆ ವಿಪ್ ಜಾರಿ