ಬೆಂಗಳೂರು: ಕೊರೊನಾ ವಾರಿಯರ್ಸ್ಗಳಾಗಿ ಅವಿರತವಾಗಿ ಶ್ರಮಿಸುತ್ತಿರುವ ನಗರ ಪೊಲೀಸರಿಗೆ ಕ್ವಾರಂಟೈನ್ಗೆ ಒಳಗಾಗಲು ಮತ್ತು ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಬೆಡ್ಗಳು ಖಾಲಿ ಇಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.
ಕೊರೊನಾ ರೋಗಿಗಳ ಆಸ್ಪತ್ರೆಯಾಗಿ ಪರಿವರ್ತಿಸಿರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆ ಕಂಡುಬಂದಿದೆ. ಅದೇ ರೀತಿ ಕೆ.ಸಿ.ಜನರಲ್ ಆಸ್ಪತ್ರೆ ಸೇರಿದಂತೆ ನಗರದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯವಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಕೊರೊನಾ ಸೋಂಕಿಗೆ ದಿನೆ ದಿನೇ ಪೊಲೀಸರು ತುತ್ತಾಗುತ್ತಿರುವ ಸಂಖ್ಯೆ ಅಧಿಕವಾಗುತ್ತಿದ್ದರೂ ಸರ್ಕಾರ ಮಾತ್ರ ಪೊಲೀಸರ ರಕ್ಷಣೆಗೆ ಸೂಕ್ತ ವ್ಯವಸ್ಥೆ ತೆಗೆದುಕೊಂಡಿಲ್ಲ ಎಂದು ಆಕ್ಷೇಪಗಳು ಕೇಳಿ ಬರುತ್ತಿವೆ. ಅಡ್ಡಿ-ಆತಂಕದ ನಡುವೆಯೂ ಕೆಲಸ ಮಾಡುವ ಪೊಲೀಸರಿಗೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕೆಂದು ಮೇಲಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈವರೆಗೂ 73 ಜನ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಮತ್ತೆ ಹಲಸೂರ್ ಗೇಟ್ ಹೆಡ್ ಕಾನ್ಸ್ಟೇಬಲ್ ಒಬ್ಬರಿಗೆ, ಸಿಸಿಬಿಯ ಇಬ್ಬರು ಪೊಲೀಸ್ ಸಿಬ್ಬಂದಿಗೆ ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಠಾಣೆಯ ಕಾನ್ಸ್ಟೇಬಲ್ ಒಬ್ಬರು ಸೇರಿದಂತೆ 6 ಜನಕ್ಕೆ ಕೊರೊನಾ ವಕ್ಕರಿಸಿದೆ. ಇನ್ನೂ ಇವರೆಲ್ಲರ ಪ್ರಾಥಮಿಕ ಸಂಪರ್ಕದಲ್ಲಿದ್ದ 500ಕ್ಕೂ ಹೆಚ್ಚು ಪೊಲೀಸರಿಗೆ ಹೋಮ್ ಕ್ವಾರಂಟೈನ್ ಮಾಡಿಸಲಾಗಿದೆ. ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿರುವ ಕಲಾಸಿಪಾಳ್ಯ ,ಅಶೋಕನ ನಗರ, ವಿಲ್ಸನ್ ಗಾರ್ಡನ್, ವಿವಿ ಪುರಂ, ಸಿಸಿಬಿ ಕಚೇರಿ ಹಾಗೂ ಕುಮಾರಸ್ವಾಮಿ ಲೇಔಟ್ ಠಾಣೆಗಳನ್ನ ಸೀಲ್ ಡೌನ್ ಮಾಡಲಾಗಿದೆ.
ಇನ್ನುಳಿದಂತೆ ರಾಜ್ಯ ಪೊಲೀಸ್ ಮೀಸಲು ಪಡೆಯ (ಕೆಎಸ್ಆರ್ಪಿ) 4ನೇ ಬೆಟಾಲಿಯನ್ ನ 6 ಪೊಲೀಸ್ ಸಿಬ್ಬಂದಿಗೆ ಕೂಡ ಕೊರೊನಾ ಪಾಸಿಟಿವ್ ದೃಢವಾಗಿದೆ. ಇದುವರೆಗೆ ಒಟ್ಟು ಕೆಎಸ್ಆರ್ಪಿ 4ನೇ ಪಡೆಯಲ್ಲಿ 17 ಪೊಲೀಸ್ ಸಿಬ್ಬಂದಿ ಕೊರೊನಾ ಪೀಡಿತರಾಗಿದ್ದಾರೆ. ಈ ವರೆಗೂ ಮೀಸಲು ಪಡೆಯ 230 ಕ್ಕೂ ಹೆಚ್ಚು ಸಿಬ್ಬಂದಿಯನ್ನ ಹೋಮ್ ಕ್ವಾರೆಂಟೈನ್ ಮಾಡಲಾಗಿದೆ.
ಪ್ರಮುಖವಾಗಿ ಕೊರೊನಾ ಪೀಡಿತರಾಗಿರುವ ಪೊಲೀಸ್ ಸಿಬ್ಬಂದಿಗೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ವಾರಿಯರ್ಸ್ ಆಗಿ ಕೆಲಸ ಮಾಡಿರುವ ಪೊಲೀಸರು ಸೆಲ್ಫಿ ವಿಡಿಯೋ ಮಾಡಿ ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು ಕೊರೊನಾ ಪರೀಕ್ಷೆಗೆ ಹಾಗೂ ಚಿಕೆತ್ಸೆಗೆ ಪ್ರತ್ಯೇಕ ಆಸ್ಪತ್ರೆಯನ್ನು ನಿಗದಿ ಮಾಡುವಂತೆ ಕೇಳಿಕೊಂಡಿದ್ದಾರೆ.