ಬೆಂಗಳೂರು: ಬಡ್ತಿ ವಿಚಾರದಲ್ಲಿ ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದ ಎಡಿಜಿಪಿ ರವೀಂದ್ರನಾಥ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಹಿಂಪಡೆದಿದ್ದಾರೆ.
ಐಪಿಎಸ್ ಅಧಿಕಾರಿ ರವೀಂದ್ರನಾಥ್ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದರು. ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಹಿಂಪಡೆದಿದ್ದಾರೆ
ತಮ್ಮಗಿಂತ ಕಿರಿಯ ಅಧಿಕಾರಿ ಸುನೀಲ್ ಕುಮಾರ್ಗೆ ಡಿಜಿಪಿಯಾಗಿ ಬಡ್ತಿ ನೀಡಿದ್ದರಿಂದ ಅರಣ್ಯ ಇಲಾಖೆಯ ಎಡಿಜಿಪಿಯಾಗಿದ್ದ ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿ ಕರ್ತವ್ಯಕ್ಕೆ ರಾಜೀನಾಮೆ ನೀಡಿದ್ದರು. ತಮಗಿಂತ ಕಿರಿಯ ಸ್ಥಾನದಲ್ಲಿರುವವರಿಗೆ ಬಡ್ತಿ ನೀಡಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಡಿಜಿ, ಐಜಿಪಿ ಪ್ರವೀಣ್ ಸೂದ್ಗೆ ರಾಜೀನಾಮೆ ಪತ್ರ ರವಾನಿಸಿದ್ದರು. ಪ್ರವೀಣ್ ಸೂದ್ ಅವರು ರಾಜ್ಯ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ರಾಜೀನಾಮೆ ಪತ್ರ ವರ್ಗಾಯಿಸಿದ್ದರು. ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ ಭರವಸೆಯಿಂದ ಎಲ್ಲವೂ ತಿಳಿಯಾಗಿದೆ.