ಕೆ.ಆರ್.ಪುರ: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿಯಲ್ಲಿ ಕಿಡಿಗೇಡಿಗಳು ಗಲಭೆ ನಡೆಸಿರುವುದು ಖಂಡನೀಯ, ಗಲಭೆಗೆ ಕಾರಣರಾದ ಆರೋಪಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಕ್ಷೇತ್ರದ ಬಸವನಪುರ ವಾಡ್೯ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ರಾಜೀವ್ ಗಾಂಧಿ ಆವಾಸ್ ಯೋಜನೆಯಡಿ ನಿರ್ಮಾಣ ಮಾಡಿರುವ ಮನೆಗಳಿಗೆ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಪೈಗಂಬರ್ ಬಗ್ಗೆ ಅವಹೇಳನಕಾರಿ ಸಂದೇಶ ರವಾನಿಸಿರುವುದು ತಪ್ಪು. ಮುಸ್ಲಿಂ ಬಾಂಧವರು ತಾಳ್ಮೆಯಿಂದ ಇರಬೇಕಿತ್ತು, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಕೆಲಸ ಮಾಡಬೇಕು, ಆದರೆ ಮುಸ್ಲಿಂ ಜನತೆ ಕಾನೂನನ್ನು ಕೈಗೆ ತೆಗೆದುಕೊಂಡಿರುವುದು ಖಂಡನೀಯ, ಯಾರೇ ಆಗಲಿ ಕಾನೂನಿನ ವಿರುದ್ಧ ಹೋರಾಡುವುದು ಸರಿಯಲ್ಲ. ಗಲಭೆಗೆ ಕಾರಣರಾದವರು ಯಾರೇ ಆಗಲಿ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.
ಇಲ್ಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಸ್ವತಂತ್ರ ನಗರದಲ್ಲಿ ನಾಲ್ಕೂವರೆ ಎಕರೆ ಜಾಗದಲ್ಲಿ ಸುಮಾರು ಆರೂವರೆ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಪಾಕ್೯ ನಿರ್ಮಾಣವಾಗಲಿದ್ದು, ಭೂಮಿ ಪೂಜೆ ನೆರವೇರಿಸಲಾಗಿದೆ. ಮಳೆಗಾಲದ ನಂತರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಇದೇ ವೇಳೆ ಬಸವನಪುರ ವಾರ್ಡ್ನಲ್ಲಿ ವಾಸ ಮಾಡುತ್ತಿರುವ 580 ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.
ನಂತರ ಮಾತನಾಡಿದ ಪಾಲಿಕೆ ಸದಸ್ಯ ಜಯಪ್ರಕಾಶ್, ಕಳೆದ ಐದು ವರ್ಷದಲ್ಲಿ ಜನರಿಗೆ ಹೇಳಿದ ಹಾಗೆ ಅವರ ಹಕ್ಕು ಪತ್ರ ಅವರ ಕೈ ಸೇರಿಸಿದ್ದೇನೆ ಎಂದರು. ಇವತ್ತು 588 ಹಕ್ಕು ಪತ್ರವನ್ನು ಕೊಟ್ಟಿದ್ದೇವೆ ಎಂದು ತಿಳಿಸಿದರು. ಬಸವನಪುರ ಕೆರೆಯ ಪಕ್ಕ ಆರೂವರೆ ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನಕ್ಕೆ ಚಾಲನೆ ನೀಡಿದ್ದೇವೆ ಎಂದರು.