ಬೆಂಗಳೂರು: ನೈಸ್ ರಸ್ತೆಯಲ್ಲಿ ಬೈಕ್ ಮತ್ತು ಜೆಸಿಬಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದ. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ನೈಸ್ ರಸ್ತೆಯ ಸೋಂಪುರ ಟೋಲ್ ಕಡೆಯಿಂದ ಕನಕಪುರ ರಸ್ತೆಗೆ ಬರುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. KA-04 JR-2959 ಡ್ಯೂಕ್ ಬೈಕ್ ಸವಾರ ರಕ್ಷಿತ್ ಗೌಡ ಅಸುನೀಗಿದ ಯುವಕ ಎಂದು ಗುರುತಿಸಲಾಗಿದೆ.
ಡ್ಯೂಕ್ ಬೈಕ್ ಸವಾರ ರಕ್ಷಿತ್ ಗೌಡ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ. ಈ ವೇಳೆ ಎದುರಿಗೆ ಬಂದ ಜೆಸಿಬಿಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿತ್ತು. ಚಿಕಿತ್ಸೆಗೆ ರಕ್ಷಿತ್ ಗೌಡನನ್ನು ಸಾಯಿರಾಮ್ ಆಸ್ಪತ್ರೆಗೆ ದಾಖಲು ಮಾಡಲು ಸಾಗಿಸುವಾಗ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.