ಬೆಂಗಳೂರು: ಕಾರ್ಪೊರೇಟರ್ಗಳು ಗೆಲ್ಲಬಾರದು ಎಂದು ಬಿಜೆಪಿ, ಆರ್ಎಸ್ಎಸ್ ಸೇರಿ ವಾರ್ಡ್ಗಳ ಮರುವಿಂಗಡಣೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ಬಿಬಿಎಂಪಿ ವಾರ್ಡ್ಗಳನ್ನು ವಿಂಗಡಿಸಿದೆ ಎಂದು ಮಾಜಿ ಸಚಿವ ರಾಮಲಿಂಗರೆಡ್ಡಿ ಅರೋಪಿಸಿದ್ದಾರೆ.
ಇಂದು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲಕ್ಕಸಂದ್ರದ ರಾಮಲಿಂಗ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಬಿಟಿಎಂ ಲೇಔಟ್ ಶಾಸಕ ರಾಮಲಿಂಗರೆಡ್ಡಿ ಅವರು, ಡಿ.ಕೆ. ಶಿವಕುಮಾರ್ ಅಧ್ಯಕ್ಷರಾದ ಮೇಲೆ ಬೆಂಗಳೂರಿನ ಎಲ್ಲಾ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಅದೇ ರೀತಿ ಇಂದು ನನ್ನನ್ನು ಭೇಟಿಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲ ಡಿ.ಕೆ.ಶಿವಕುಮಾರ್ ಅವರ ಜೊತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಬಿಬಿಎಂಪಿ ವಾರ್ಡ್ಗಳ ಮರು ವಿಂಗಡಣೆ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಮ್ಮ ಅಸಮಧಾನ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ಗಳು ಯಾರು ಗೆಲ್ಲಬಾರದು ಎಂದು ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ಬಿಬಿಎಂಪಿ ವಾರ್ಡ್ಗಳನ್ನು ವಿಂಗಡಿಸಿದೆ. ನೈಜವಾಗಿ ವಾರ್ಡ್ಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರು ಮಾಡುತ್ತಾರೆ. ಆದರೆ ಈಗ ಬಿಜೆಪಿಗೆ ಅನುಕೂಲವಾಗಲಿ ಅಂತ ಬಿಜೆಪಿ ಕಚೇರಿಯಲ್ಲಿ ಕುಳಿತುಕೊಂಡೇ ಬಿಜೆಪಿ ಶಾಸಕರು ಮತ್ತು ಆರ್ಎಸ್ಎಸ್ನವರು ಹೀಗೆ ಮಾಡಿದ್ದಾರೆ. ಈ ವಿಚಾರವಾಗಿ ನಮ್ಮ ಶಾಸಕರು ತಕರಾರು ಅರ್ಜಿ ಸಲ್ಲಿಸಿದ್ದಾರೆ. ನಾವು ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.