ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ವಿರುದ್ಧ ಟೀಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಬಿಜೆಪಿಯ ಲೋಕಸಭೆ ಸದಸ್ಯೆ ಶೋಭಾ ಕರಂದ್ಲಾಜೆಗೆ ಜನಪ್ರತಿನಿಧಿಗಳ ನ್ಯಾಯಾಲಯ ₹ 200 ದಂಡ ವಿಧಿಸಿ ಷರತ್ತುಬದ್ಧ ಜಾಮೀನು ನೀಡಿದೆ.
ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಸಂಸದೆ ಶೋಭಾ, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರ ಮುಂದೆ ಖುದ್ದು ಹಾಜರಾಗಿದ್ದರು.
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ನ್ಯಾಯಾಲಯದಲ್ಲಿ ಸಂಸದೆ ಶೋಭಾ ಪರ ವಕೀಲ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿ, ಜಾಮೀನು ಮಂಜೂರು ಮಾಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ನ್ಯಾಯಾಲಯಕ್ಕೆ ₹ 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ₹ 10 ಸಾವಿರ ನಗದು ಭದ್ರತೆ ಒದಗಿಸಿ ಎಂದು ಆದೇಶಿಸಿದ ನ್ಯಾಯಾಧೀಶರು, ದಂಡ ವಿಧಿಸಿ ಜಾಮೀನು ಮಂಜೂರು ಮಾಡಿದರು.ಪ್ರಕರಣವೇನು?ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಕಂಪನಿಯ ಮುಖ್ಯಸ್ಥ ಮನ್ಸೂರ್ ಅಲಿ ಖಾನ್ ಹಣವನ್ನು ಪಿಎಫ್ಐ ಸಂಘಟನೆಗೆ ಉಪಯೋಗಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಅಂಶಗಳ ಬಗ್ಗೆ ತನಿಖೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದರು. ಈ ಬಗ್ಗೆ ಪಿಎಫ್ ಐ ಶೋಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿತ್ತು. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ಇದ್ದ ಕಾರಣ ಶೋಭಾ ವಿರುದ್ಧ ವಾರಂಟ್ ಜಾರಿಯಾಗಿತ್ತು.