ನ್ಯಾಯಾಂಗದ ವಿರುದ್ಧ ಸಿಟಿ ರವಿ, ಡಿವಿಎಸ್ ಟೀಕೆ: ಬೆಂಗಳೂರು ವಕೀಲರ ಸಂಘ ಆಕ್ಷೇಪ - DV Sadananda Gowda
'ನ್ಯಾಯಾಧೀಶರು ಸರ್ವಜ್ಞರಲ್ಲ' ಎಂದು ಹೇಳಿ ಕೇಂದ್ರ, ರಾಜ್ಯ ಸರ್ಕಾರಗಳನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಮುಖಂಡ ಸಿ.ಟಿ. ರವಿ ಹಾಗೂ ಡಿ.ವಿ ಸದಾನಂದಗೌಡ ಹೇಳಿಕೆ ವಿರುದ್ಧ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: 'ನ್ಯಾಯಾಧೀಶರು ಸರ್ವಜ್ಞರಲ್ಲ' ಎಂದ ಬಿಜೆಪಿ ಮುಖಂಡ ಸಿ.ಟಿ. ರವಿ ಹಾಗೂ ಲಸಿಕೆ ಉತ್ಪಾದನೆ ಆಗದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ ಎಂದಿರುವ ಕೇಂದ್ರ ಮಂತ್ರಿ ಡಿ.ವಿ. ಸದಾನಂದಗೌಡ ಹೇಳಿಕೆಗಳಿಗೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಂಗನಾಥ್, ಕೋವಿಡ್ ಎರಡನೇ ಅಲೆ ಇಡೀ ದೇಶದ ನಾಗರಿಕರನ್ನು ಕಂಗೆಡಿಸಿದೆ. ಕಳೆದೊಂದು ವರ್ಷದ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೋಂಕು ತಡೆಗೆ ಯಾವೆಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿತ್ತೋ ಅವುಗಳನ್ನು ಕೈಗೊಳ್ಳುವ ಬದಲು ಸಮಯ ವ್ಯರ್ಥಗೊಳಿಸಿವೆ. ಸಾರ್ವಜನಿಕ ವಲಯದ ಆರೋಗ್ಯ ಮತ್ತು ಸಾಂಕ್ರಾಮಿಕ ರೋಗದ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಮೇಲೆ ಹೊಣೆಗಾರಿಕೆಯಿದೆ. ಆದರೆ ಸರ್ಕಾರಗಳು ಅವುಗಳನ್ನು ಸರಿಯಾಗಿ ನಿಭಾಯಿಸಿಲ್ಲ. ತನ್ನ ಪಾಲಿನ ಶಾಸನಬದ್ಧ ಕೆಲಸವನ್ನು ಅರಿಯದೆ ಮೈಮರೆತ ಕಾರ್ಯಾಂಗಕ್ಕೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ನ ಮಧ್ಯಂತರ ಆದೇಶಗಳು ಮುಜುಗರ ತಂದಿರುವುದು ಸ್ಪಷ್ಟ.
ಓದಿ:ನ್ಯಾಯಮೂರ್ತಿಗಳೇನು ಸರ್ವಜ್ಞರಲ್ಲ : ಸಿ ಟಿ ರವಿ ಅಸಮಾಧಾನ
ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಮೀಸಲಾಗಿರುವ ಉನ್ನತ ನ್ಯಾಯಾಲಯಗಳು ಸಂವಿಧಾನದ ಅನುಚ್ಛೇದ 21 ರಲ್ಲಿ ಮಾನ್ಯ ಮಾಡಿದ ನಾಗರಿಕರ ಬದುಕುವ ಹಕ್ಕನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಗಳನ್ನು ಇರಿಸಿದೆ. ಇದನ್ನು ಸರಿಯಾಗಿ ಗ್ರಹಿಸದೆ ನ್ಯಾಯಾಲಯಗಳು ಮತ್ತು ನ್ಯಾಯಾಧೀಶರನ್ನು ಗುರಿಯಾಗಿಸಿಕೊಂಡು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮತ್ತು ಮಾಜಿ ಸಚಿವ ಸಿ.ಟಿ. ರವಿ ನೀಡಿರುವ ಹೇಳಿಕೆಗಳು ಖಂಡನಾರ್ಹವಾಗಿವೆ. ನ್ಯಾಯಾಧೀಶರ ಆತ್ಮಸ್ಥೈರ್ಯವನ್ನು ಕೆಡಿಸುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ನೀಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ರಾಜಕೀಯ ನಾಯಕರು ತಮ್ಮ ಮಾತಿನ ಮೇಲೆ ನಿಗಾ ಇಟ್ಟಿರಬೇಕು. ಇಂತಹ ಕೀಳು ಮಟ್ಟದ ಮಾತುಗಳು ಕೆಟ್ಟ ಪರಂಪರೆಯನ್ನು ಬೆಳೆಸುತ್ತವೆ ಎಂದು ರಂಗನಾಥ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.