ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವಣಗೆರೆ ಹಾಗೂ ಕೊಪ್ಪಳ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ.
ಬೆಳಗ್ಗೆ ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ಸಿದ್ದರಾಮೇಶ್ವರ ರಥ ವಜ್ರಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಲಿದ್ದಾರೆ. ಬಳಿಕ ಕೊಪ್ಪಳ ಜಿಲ್ಲೆಗೆ ತೆರಳಲಿರುವ ಬಸವರಾಜ ಬೊಮ್ಮಾಯಿ, ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ನೀಡಿದೆ. ಅಂಜನಾದ್ರಿ ಬೆಟ್ಟದ ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ವೀಕ್ಷಿಸಿದ್ದು, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಮಧ್ಯಾಹ್ನ ಸಿಎಂ ಕೊಪ್ಪಳ ಜಿಲ್ಲೆಯಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿ, ಬಳಿಕ ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ಕೊಪ್ಪಳದ ಗವಿಸಿದ್ದೇಶ್ವರ ಮಠದ ವಸತಿ ಮತ್ತು ದಾಸೋಹ ನಿಲಯ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ ಹತ್ತು ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
ಓದಿ : 10 ರೂ. ಡಾಕ್ಟರ್ ಖ್ಯಾತಿಯ ಡಾ.ಮಲ್ಲೆ ಅವರಿಗೆ ಸಂಸದರಿಂದ ಸನ್ಮಾನ