ಬೆಂಗಳೂರು: ಆರ್ಯ ಈಡಿಗ ಸಮುದಾಯದ ಬೇಡಿಕೆಯನ್ನು ಪರಿಗಣಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಧರ್ಮ ಗುರು ನಾರಾಯಣಗುರು ಹೆಸರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಮ್ಮತಿ ನೀಡಿದ್ದಾರೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.
ಈಡಿಗ ಸಮುದಾಯದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು. ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಕುಮಾರ್ ಬಂಗಾರಪ್ಪ ನೇತೃತ್ವದ ನಿಯೋಗ ಸಮುದಾಯ ಅಭಿವೃದ್ಧಿ ಕಾರ್ಯಗಳ ಕುರಿತು ಸಿಎಂ ಜೊತೆ ಮಾತುಕತೆ ನಡೆಸಿತು.
ಸಿಎಂ ಭೇಟಿ ನಂತರ ಮಾತನಾಡಿದ ಕುಮಾರ್ ಬಂಗಾರಪ್ಪ, ನಮ್ಮ ಸಮಾಜಕ್ಕೆ ಬೇಕಾದ ಸವಲತ್ತುಗಳನ್ನು ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಸ್ಪಂದಿಸಿದ ಸಿಎಂ, ನಾರಾಯಣಗುರು ಹೆಸರಿನಲ್ಲಿ ಕರ್ನಾಟಕದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಭರವಸೆ ನೀಡಿದ್ದಾರೆ. ಇದೇ ವರ್ಷದ ಬಜೆಟ್ನಲ್ಲಿ ಮಂಜೂರು ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ. ಹಾಗಾಗಿ ಇಡೀ ಸಮಾಜದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಶೈಕ್ಷಣಿಕ ಮತ್ತು ಆರ್ಥಿಕವಾಗಿ ನಮ್ಮ ಸಮುದಾಯವನ್ನು ಬಲಪಡಿಸಬೇಕಿದೆ. ಮಂಗಳೂರು, ಉಡುಪಿ, ಕಾರವಾರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕರ್ನಾಟಕದ ಅನೇಕ ಭಾಗಗಳಲ್ಲಿ ಸಣ್ಣ ಮಟ್ಟದಲ್ಲಿ ಇರುವಂತಹ ನಮ್ಮ ಆರ್ಯ ಈಡಿಗ ಸಂಘದ ಜನಾಂಗವನ್ನು ಸಂಪೂರ್ಣವಾಗಿ ಮೇಲೆತ್ತಲು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಮೇಲೆತ್ತಲು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲು ಸಿಎಂ ಸಮ್ಮತಿಸಿದ್ದಾರೆ ಎಂದರು.
ಸದ್ಯ ಮೆಡಿಕಲ್ ಕಾಲೇಜು ಎಲ್ಲಿ ಸ್ಥಾಪನೆ ಮಾಡಬೇಕು ಎನ್ನುವ ನಿರ್ಧಾರ ಕೈಗೊಂಡಿಲ್ಲ. ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಸಮಾಜದ ಮುಖಂಡರ ಜೊತೆ ಮಾತುಕತೆ ನಡೆಸಿ ಇನ್ನೆರಡು ದಿನದಲ್ಲಿ ಜಾಗವನ್ನು ನಿಗದಿಪಡಿಸಿ ನಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದರು.
ಸಚಿವ ಸಂಪುಟ ವಿಸ್ತರಣೆ ವೇಳೆ ನಮ್ಮ ಸಮುದಾಯದವರಿಗೆ ಸಚಿವ ಸ್ಥಾನ ನೀಡುವ ಕುರಿತು ಯಾವುದೇ ಬೇಡಿಕೆ ಇಟ್ಟಿಲ್ಲ. ನಮ್ಮ ಸಮುದಾಯಕ್ಕೆ ಕೊಡಬೇಕಾದ ಸ್ಥಾನಮಾನವನ್ನು ಸರ್ಕಾರದಲ್ಲಿ ಕೊಟ್ಟಾಗಿದೆ ಎಂದರು.