ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆ ಸಹಿಸುವುದಿಲ್ಲ. ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ವಿಧಾನಸೌಧದಲ್ಲಿ ನಡೆದ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಎಂ ಭಾನುವಾರ ಸೂಚನೆಗಳನ್ನು ನೀಡಿದ್ದಾರೆ.
ಬಡವರಿಗೆ ಸಹಾಯ ಮಾಡಲು ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಜನ ಸಾಮಾನ್ಯರಿಗೆ ಆಡಳಿತದಲ್ಲಿ ಬದಲಾವಣೆ ಆಗುತ್ತಿದೆ. ಸರಳ, ಸುಲಭ ಮತ್ತು ಸ್ವಚ್ಛವಾಗಿದೆ ಎಂಬ ಭಾವನೆ ಬರುವಂತೆ ಆಡಳಿತ ನೀಡಬೇಕು. ನಾವು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡಬೇಕು. ನನ್ನ ಕಲ್ಪನೆಯ ನವ ಕರ್ನಾಟಕದ ಸಾಕಾರಕ್ಕೆ ನಿಮ್ಮ ಸಹಕಾರ ಅಗತ್ಯ ಎಂದರು.
ಸಭೆಯಲ್ಲಿ ಸಿಎಂ ಹೇಳಿದ್ದೇನು?:
- ಪರಿಹಾರ ನೀಡುವ ಕಾರ್ಯಕ್ರಮಗಳಲ್ಲಿ ಅಕ್ರಮಗಳನ್ನು ತಡೆಯಬೇಕು. ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ವಿಳಂಬ ಧೋರಣೆ ಸಲ್ಲದು. ವಿಳಂಬ ಧೋರಣೆಯು ಒಟ್ಟಾರೆ ರಾಜ್ಯದ ವರ್ಚಸ್ಸಿನ ಮೇಲೆ ಪ್ರಭಾವ ಬೀರಲಿದೆ.
- ಸರ್ಕಾರದ ಕಡೆಯ ವರ್ಷವಾಗಿರುವುದರಿಂದ ಈ ವರ್ಷ ಅನುಷ್ಠಾನಗೊಳ್ಳಬೇಕಿರುವ ಮುಂದುವರೆದ ಕಾರ್ಯಕ್ರಮಗಳು ಹಾಗೂ ಬಜೆಟ್ ಕಾರ್ಯಕ್ರಮಗಳ ಅನುಷ್ಠಾನ ಮಾಡಬೇಕಿದೆ. ಅದಕ್ಕಾಗಿ ಸೂಕ್ತವಾಗಿ ಯೋಜಿಸಬೇಕು. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಿಬೇಕು. ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡಬೇಕು.
- ಜಿಲ್ಲೆಯ ಎಲ್ಲಾ ತಹಶೀಲ್ದಾರರ ಹಾಗೂ ಅಪರ ಜಿಲ್ಲಾಧಿಕಾರಿಗಳ ಕಚೇರಿಗೆ ವಾರಕ್ಕೊಮ್ಮೆ ಭೇಟಿ ನೀಡಬೇಕು. ಅರ್ಜಿಗಳು ಬಾಕಿ ಉಳಿಯದಂತೆ ಕ್ರಮ ವಹಿಸಬೇಕು.
- ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮದ ಸಂದರ್ಭದಲ್ಲಿ ಎಲ್ಲ ಸಹಾಯಕ ಕಮಿಷನರ್, ತಹಶೀಲ್ದಾರ್, ಎಡಿಸಿಗಳು ಜೊತೆಗಿರಬೇಕು. ದೀನದಲಿತರಿಗೆ, ಬಡವರಿಗೆ, ರೈತರಿಗೆ ಯೋಜನೆಗಳನ್ನು ತಲುಪಿಸಬೇಕು. ಕಚೇರಿ ಕೆಲಸದ ಅವಧಿಯನ್ನು ವಿಸ್ತರಿಸಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ.
- ರಾಜ್ಯದ ವಿವಿಧ ಭಾಗಗಳಿಂದ ಮುಖ್ಯಮಂತ್ರಿಗಳ ಕಚೇರಿಗೆ 16,436 ಅರ್ಜಿಗಳು ಬಂದಿವೆ. 10 ಸಾವಿರ ನಿಮಗೆ ಕಳಿಸಿದ್ದೇನೆ. 6,000 ಬಾಕಿ ಇವೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲು ಒಂದು ಸೆಲ್ ರಚಿಸಲು ಸಿಎಂ ಸೂಚಿಸಿದರು.
- ಅರ್ಜಿ ಕೊಟ್ಟರೆ ಕೆಲಸವಾಗುವುದಿಲ್ಲ ಎಂಬ ಮಾತಿದೆ. ನಿಮ್ಮ ಪಾತ್ರ ಬಹಳ ಮುಖ್ಯ. ಬಡವರ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮಹತ್ವ ನೀಡಿ. ದೌರ್ಜನ್ಯ ಪ್ರಕರಣಗಳ ಬಗ್ಗೆ ಗಮನ ನೀಡಿ, ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಮನೆ ಬಾಗಿಲಿಗೆ ದಾಖಲೆಗಳು ಮುಂತಾದವುಗಳ ಬಗ್ಗೆ ಪರಿಶೀಲಿಸಿ.
- ಪ್ರಾಧಿಕಾರದ ಅರ್ಜಿಗಳು, ಭೂ ಮಂಜೂರಾತಿ ಪ್ರಕರಣಗಳು, ಪಿಂಚಣಿಗಳು, ಗ್ರಾಮ ಒನ್ ಮುಂತಾದ ಯೋಜನೆಗಳ ಅನುಷ್ಠಾನದ ಬಗ್ಗೆ ಗಮನ ಹರಿಸಿ. ನಿಮ್ಮ ಆಡಳಿತದ ವೈಖರಿಯನ್ನು ಬದಲಾಯಿಸಿ, ಜನಪರ ಆಡಳಿತ ನೀಡಿ. ಉತ್ತರದಾಯಿತ್ವ, ಪಾರದರ್ಶಕತೆ ಇರಲಿ.
- ಮಳೆಗಾಲಕ್ಕೆ ಬೀಜ ಮತ್ತು ರಸಗೊಬ್ಬರಗಳ ಬೇಡಿಕೆ, ದಾಸ್ತಾನುಗಳ ಬಗ್ಗೆ ಪರಿಶೀಲಿಸಿ. ಸೂಕ್ತ ವ್ಯವಸ್ಥೆ ಕೈಗೊಳ್ಳುವುದು. ಎಲ್ಲಿಯೂ ಕೊರತೆ ಕಂಡುಬರದಂತೆ ವ್ಯವಸ್ಥೆ ಮಾಡುವುದು. ಡಿಎಪಿ ಕೊರತೆಯಿದ್ದಲ್ಲಿ ಮುಂಚಿತವಾಗಿಯೇ ಸೂಕ್ತ ಕ್ರಮ ಕೈಗೊಳ್ಳುವುದು.
- ಭೂಮಿ ಯೋಜನೆಯಡಿ ಜಿಲ್ಲೆಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದ ಮುಖ್ಯಮಂತ್ರಿಗಳು, ಭೂಮಿ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಪ್ರಕರಣಗಳ ವಿಲೇವಾರಿಯನ್ನು 30 ದಿನಗಳೊಳಗೆ ಮಾಡುವುದು.
- ಭೂ ಮಂಜೂರಾತಿ, ಭೂ ಪರಿವರ್ತನೆ, ಸರ್ವೇ ಇಲಾಖೆಯಲ್ಲಿ ಅಳತೆಗಾಗಿ ಬಾಕಿ ಇರುವ ಅರ್ಜಿಗಳು, ತಹಶೀಲ್ದಾರರ ಬಳಿ 3 ಮತ್ತು 9 ವಿಸ್ತೀರ್ಣ ವ್ಯತ್ಯಾಸದಿಂದ ತಿದ್ದುಪಡಿಗಾಗಿ ಬಾಕಿ ಇರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡುವುದು.
- 72 ಗಂಟೆಗಳಲ್ಲಿ ಅರ್ಜಿ ವಿಲೇವಾರಿಯಾಗುವ ಬಗ್ಗೆ ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡುವುದು.
- ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಯ ಸ್ಥಿತಿಗತಿ ವ್ಯವಸ್ಥೆ ಪರಿಪೂರ್ಣವಾಗಿರಬೇಕು. ಯೋಜನೆಯನ್ನು ಟಾಸ್ಕ್ ನಂತೆ ಕೈಗೊಳ್ಳಬೇಕು. ಪ್ರಾದೇಶಿಕ ಆಯುಕ್ತರು ಮೇಲ್ವಿಚಾರಣೆ ಮಾಡುವುದು.
- ಗ್ರಾಮ ಒನ್ ಕೇಂದ್ರಗಳಲ್ಲಿ ಎಷ್ಟು ಅರ್ಜಿಗಳು ಬಂದಿವೆ, ಎಷ್ಟು ಪ್ರಮಾಣಪತ್ರಗಳ ವಿಲೇವಾರಿಯಾಗುತ್ತಿವೆ ಎಂದು ಜಿಲ್ಲಾಧಿಕಾರಿಗಳು ತಿಂಗಳಿಗೊಮ್ಮೆ ಪರಿಶೀಲಿಸುವುದು.
- ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಹಾಸನ, ಚಾಮರಾಜನಗರ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಸ್ಥಾಪಿಸಬೇಕಿರುವ ಗ್ರಾಮ ಒನ್ ಕೇಂದ್ರಗಳನ್ನು ತಕ್ಷಣ ಪ್ರಾರಂಭ ಮಾಡಬೇಕು. ಈ ತಿಂಗಳೊಳಗೆ ಅನುಮೋದನೆ ನೀಡಿ ಉದ್ಘಾಟನೆಗೆ ಕ್ರಮ ವಹಿಸುವುದು.
- ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಕಾಲಮಿತಿಯೊಳಗೆ ತಾಲ್ಲೂಕು ಮಟ್ಟದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕ ಅಲ್ಪಾವಧಿ ಟೆಂಡರ್ ಕರೆಯುವುದು. ಯಾವುದೇ ಟೆಂಡರ್ ನಲ್ಲಿ ಎಲ್ - 1ಗೆ ಕೊಡಬೇಕು. ಇಲ್ಲದಿದ್ದರೆ ಟೆಂಡರ್ ರದ್ದುಪಡಿಸುವುದು.
- ಅಮೃತ್ ನಿರ್ಮಲ್ ನಗರ ಯೋಜನೆಯಡಿ ಬಾಕಿ ಇರುವ ಟೆಂಡರ್ಗಳನ್ನು ಕರೆಯುವುದು, ಈಗಾಗಲೇ ಟೆಂಡರ್ ಕರೆದಿರುವುದಕ್ಕೆ ಕಾರ್ಯಾದೇಶ ನೀಡುವುದು. ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು.
- ನಗರ ಪ್ರದೇಶಗಳಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಆವಾಸ್ ಯೋಜನೆ- ನಗರದಡಿ ಫಲಾನುಭವಿಗಳ ಕನಿಷ್ಠ ಆಯ್ಕೆ ಮಾಡಿರುವ ಜಿಲ್ಲೆಗಳಾದ ಬೆಂಗಳೂರು ನಗರ, ಕಲಬುರಗಿ, ಧಾರವಾಡ, ಹಾಸನ, ವಿಜಯನಗರ ಮೇ ಅಂತ್ಯದೊಳಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವುದು. ಈ ಬಗ್ಗೆ 15 ದಿನಗಳಲ್ಲಿ ಪ್ರಗತಿ ಕಡಿಮೆ ಇರುವ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸುವುದು.
ಇದನ್ನೂ ಓದಿ: ಮೇ 13ರಂದು ಸಿಎಂ ಉತ್ತರಪ್ರದೇಶ ಪ್ರವಾಸ.. ಅವಕಾಶ ಸಿಕ್ಕರೆ ದೆಹಲಿ ಭೇಟಿ ಸಾಧ್ಯತೆ