ಬೆಂಗಳೂರು: ಮಳೆಹಾನಿ ಕುರಿತು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳದ ಪಾಲಿಕೆ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ಅಲ್ಲದೇ, ಇನ್ಮುಂದೆ ಸಮರ್ಥವಾಗಿ ಕಾರ್ಯನಿರ್ವಹಿಸಲು ವಿಫಲವಾದ ಅಧಿಕಾರಿಗಳನ್ನು ಎತ್ತಂಗಡಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸಂಭವಿಸಿದ ಮಳೆಹಾನಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರ ಪ್ರದಕ್ಷಿಣೆ ಮೂಲಕ ಪರಿಶೀಲನೆ ನಡೆಸಿದರು. ಪರಿಹಾರ ಕಾರ್ಯಾಚರಣೆಗಳನ್ನು ವೀಕ್ಷಿಸಿದರು. ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬೊಮ್ಮಾಯಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಗರಂ ಆದರು.
ಮಳೆ ಅನಾಹುತ ತಡೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜನವರಿಯಲ್ಲೇ ಸೂಚನೆ ನೀಡಿದ್ದರೂ ಯಾಕೆ ಎಚ್ಚರ ತಪ್ಪಿದ್ದೀರಿ? ಎಂದು ಪಾಲಿಕೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಸರ್ಕಾರ ಸೂಚನೆ ನೀಡಿದಾಗಲೇ ಎಚ್ಚೆತ್ತುಕೊಂಡಿದ್ದಾರೆ ಇಂದು ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ರಾಜಕಾಲುವೆ ಕಾಮಗಾರಿಗಳ ಗುಣಮಟ್ಟದ ಬಗ್ಗೆಯೂ ಮುಖ್ಯಮಂತ್ರಿಗಳು ಆಕ್ಷೇಪ ವ್ಯಕ್ತಪಡಿಸಿದರು. ಕಾಮಗಾರಿಗಳಲ್ಲಿ ಗುಣಮಟ್ಟದ ಕೊರತೆ ಕಂಡು ಬರುತ್ತಿದೆ ಎಂದು ಕಿಡಿಕಾರಿದರು. ಇಂದಿನಿಂದಲೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಮಳೆ ಹಾನಿ ತಪ್ಪಿಸಲು ಅಧಿಕಾರಿಗಳ ಮಟ್ಟದಲ್ಲಿಯೇ ಕಾರ್ಯಪಡೆಯನ್ನು ರಚಿಸಬೇಕು.
ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಮಳೆಯ ಮುನ್ಸೂಚನೆ ಇರುವ ವೇಳೆ ಅಧಿಕಾರಿಗಳು ರಜೆ ಮೇಲೆ ತೆರಳದೇ ನಿಯೋಜಿತ ಸ್ಥಳದಲ್ಲಿದ್ದು ತಮ್ಮ ತಮ್ಮ ಕರ್ತವ್ಯ ನಿಭಾಯಿಸಲು ಮುಂದಾಗಬೇಕು. ಮಳೆಹಾನಿ ವಿಚಾರದಲ್ಲಿ ಕರ್ತವ್ಯಲೋಪವೆಸಗಿದಲ್ಲಿ ಅಂತಹ ಅಧಿಕಾರಿಗಳನ್ನು ಎತ್ತಂಗಡಿ ಮಾಡುತ್ತೇನೆ ಎಂದು ಸಿಎಂ ಎಚ್ಚರಿಕೆ ನೀಡಿದರು ಎಂದು ತಿಳಿದು ಬಂದಿದೆ.
ಓದಿ: SSLC Result 2022: ಶಾಸಕ ಡಾ. ಶಿವರಾಜ್ ಪಾಟೀಲ್ ಪುತ್ರಿ ರಾಜ್ಯಕ್ಕೆ ಟಾಪರ್