ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ನಗರದ ಅಲಿ ಅಸ್ಗರ್ ರಸ್ತೆಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆಯ ನೂತನ ಮಾಪನ ಸೌಧ ಕಟ್ಟಡವನ್ನು ಉದ್ಘಾಟಿಸಿದರು.
ಕಾನೂನು ಮತ್ತು ಮಾಪನ ಶಾಸ್ತ್ರ ಇಲಾಖೆಯು ತೂಕ ಮತ್ತು ಅಳತೆಗಳಲ್ಲಿ ಮೋಸವಾಗುವುದನ್ನು ತಡೆಗಟ್ಟಿ ಗ್ರಾಹಕರ ಹಿತರಕ್ಷಣೆಯನ್ನು ಕಾಪಾಡುವ ಇಲಾಖೆಯಾಗಿದೆ. ಬೆಂಗಳೂರಿನ ಆಲಿ ಆಸ್ಕರ್ ರಸ್ತೆಯ ಕಾನೂನು ಮಾಪನಶಾಸ್ತ್ರ ಇಲಾಖೆಯ ಕೇಂದ್ರ ಕಚೇರಿಯ ಪಕ್ಕದಲ್ಲೇ ನೂತನ ಕಟ್ಟಡ ಕಾರ್ಯನಿರ್ವಹಿಸುತ್ತಿದೆ.
4.50 ಕೋಟಿ ರೂ. ಅನುದಾನದಲ್ಲಿ 4 ಅಂತಸ್ತಿನ ಕಟ್ಟಡ ಮಾಪನಸೌಧ ನಿರ್ಮಾಣ ಮಾಡಲಾಗಿದ್ದು, ಇಲಾಖೆಗೆ ನೂತನ ಟಚ್ ಸಿಗಲಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದಲ್ಲಿ ಬೆಂಗಳೂರು ನಗರದಾದ್ಯಂತ ಕಾರ್ಯನಿರ್ವಹಿಸುತ್ತಿರುವ 16 ಕಚೇರಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಪ್ರತಿ ತಿಂಗಳು ಸುಮಾರು 3 ರೂ. ಲಕ್ಷ ಬಾಡಿಗೆ ಉಳಿತಾಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಂತ ಹಂತವಾಗಿ ಸ್ವಂತ ಕಟ್ಟಡ
2015ನೇ ಸಾಲಿನಿಂದಲೂ ರಾಜ್ಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಹಂತ ಹಂತವಾಗಿ ಸ್ವಂತ ಕಟ್ಟಡಗಳನ್ನು ನಿರ್ಮಿಸಿಕೊಳ್ಳಲಾಗುತ್ತಿದೆ. ಇಲ್ಲಿಯವರೆಗೆ 19 ಸ್ವಂತ ಕಟ್ಟಡಗಳನ್ನು ಇಲಾಖೆಯಿಂದ ನಿರ್ಮಿಸಲಾಗಿದೆ ಎಂದಿದ್ದಾರೆ.
ಈ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ರಾಜ್ಯದ ಎಲ್ಲಾ ಕಚೇರಿಗಳು ಸ್ವಂತ ಕಟ್ಟಡ ಹೊಂದುವಂತೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಕಾನೂನು ಮಾಪನಶಾಸ್ತ್ರ ಇಲಾಖೆಯಲ್ಲಿ ಮಂಜೂರಾದ ಒಟ್ಟು 503 ಹುದ್ದೆಗಳಲ್ಲಿ 231 ಹುದ್ದೆಗಳು ಭರ್ತಿಯಾಗಿದ್ದು, ಉಳಿದ 272 ಹುದ್ದೆಗಳು ಖಾಲಿ ಇವೆ.
ಇಲಾಖೆಯು ವ್ಯಾಪಾರ, ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಗಳಲ್ಲಿ ಉಪಯೋಗಿಸುವ ತೂಕ, ಅಳತೆ, ತೂಕದ ಸಾಧನೆ ಹಾಗೂ ಅಳತೆ ಸಾಧನಗಳ ನಿಖರತೆ ಪರಿಶೀಲಿಸಿ ನಿಯಮಾನುಸಾರ ದಾಖಲೆಗಳ ಸತ್ಯಾಪನೆ ಮತ್ತು ಮುದ್ರೆ ಕಾರ್ಯ ಕೈಗೊಳ್ಳುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿದ್ದರೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಭೆ-ಸಮಾರಂಭ!