ಬೆಂಗಳೂರು: ಎರಡು ತಿಂಗಳಿನಲ್ಲಿ ನಗರದ ರಸ್ತೆ ಗುಂಡಿಗಳ ಮುಚ್ಚುವ ಕಾರ್ಯ ಪೂರ್ಣಗೊಳಿಸಬೇಕು ಹಾಗು ರಾಜಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಯಿತು. ರಸ್ತೆಗುಂಡಿ ಮುಚ್ಚುವ ಕಾರ್ಯ ಬೇಗ ಆಗಬೇಕು, ಮಾರ್ಚ್ ಒಳಗೆ ಕಾರ್ಯ ಪೂರ್ಣಗೊಂಡಿರಬೇಕು. ರಸ್ತೆ ದುರಸ್ತಿ ಕಾಮಗಾರಿ ತುಂಬಾ ಕಳಪೆಯಾಗಿವೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಶೇ. 40ರಷ್ಟು ಕಮಿಷನ್ ಪಡೆಯಲಾಗುತ್ತದೆ ಎಂಬ ಅಪವಾದ ಕೇಳಿಬರುತ್ತಿದೆ. ಇದೆಲ್ಲಾ ಆಗಬಾರದು, ಆದಷ್ಟು ಬೇಗ ಗುಂಡಿಗಳನ್ನು ಮುಚ್ಚಿಸಿ ಎಂದು ಸಿಎಂ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಒತ್ತುವರಿ ತೆರವು ಮಾಡಿ:
ಸಭೆಯಲ್ಲಿ ಮಳೆಹಾನಿಯ ಅನಾಹುತಗಳ ಬಗ್ಗೆ ಪ್ರಸ್ತಾಪವಾಯಿತು. ರಾಜಕಾಲುವೆ ಒತ್ತುವರಿದಾರರಿಗೆ ಬಿಸಿ ಮುಟ್ಟಿಸಲು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು. ಬೆಂಗಳೂರು ನಗರದಲ್ಲಿ ಒತ್ತುವರಿದಾರರ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಮಳೆ ಬಂದರೆ ಸಾಕಷ್ಟು ಸಮಸ್ಯೆಗಳಾಗುತ್ತವೆ, ನೀರು ಸರಾಗವಾಗಿ ಹರಿಯಲು ಒತ್ತುವರಿ ತೆರವು ಮಾಡಬೇಕು, ರಾಜಕಾಲುವೆ ಒತ್ತುವರಿ ತೆರವು ಬಗ್ಗೆ ಗಮನ ಹರಿಸಬೇಕು. ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯ ನಡೆಯಬೇಕು ರಸ್ತೆಗುಂಡಿ ಮುಚ್ಚುವ ಕಾರ್ಯ ಬೇಗ ಆಗಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
![CM Bommai instructions to close road pits in bengaluru](https://etvbharatimages.akamaized.net/etvbharat/prod-images/kn-bng-01-cm-meeting-script-7208080_02012022115927_0201f_1641104967_265.jpg)
ಕೋವಿಡ್ ನಿಯಂತ್ರಣಕ್ಕೆ ಸಹಕಾರ:
ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕೆಲಸ ಮಾಡಬೇಕು, ತಮ್ಮ ಕ್ಷೇತ್ರದಲ್ಲಿ ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕರಿಗೆ ಸಿಎಂ ಸೂಚನೆ ನೀಡಿದರು. ಕೋವಿಡ್ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲರೂ ಸಹಕಾರ ನೀಡಬೇಕು. ಕೊರೊನಾ ನಿಯಂತ್ರಣದಲ್ಲಿ ಸರ್ಕಾರಕ್ಕೆ ಸಹಕಾರ ನೀಡಬೇಕು, ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಮನವಿ ಮಾಡಿದರು.
ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ, ಎಸ್.ಟಿ. ಸೋಮಶೇಖರ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಹಲವರಿದ್ದರು.
ಇದನ್ನೂ ಓದಿ: ಬಿಹಾರ ಸಿಎಂ ನಿತೀಶ್ ಕುಮಾರ್ಗಿಂತ ಪುತ್ರ 5 ಪಟ್ಟು ಹೆಚ್ಚು ಶ್ರೀಮಂತ: ಹೀಗಿದೆ ಇಬ್ಬರ ಆಸ್ತಿ ವಿವರ..