ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 80 ಕೋಟಿ ರೂ. ಅಂದಾಜು ವೆಚ್ಚದ ಚಿನ್ನದ ರಥ ನಿರ್ಮಾಣಕ್ಕೆ ನಿನ್ನೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಆರ್.ಟಿ.ನಗರದಲ್ಲಿರುವ ರಾಜಗುರು ದ್ವಾರಕನಾಥ್ ಗುರೂಜಿ ಅವರ ಜೊತೆ ಸಮಾಲೋಚನೆ ನಡೆಸಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಚಿನ್ನದ ರಥ ತಯಾರಿಗೆ ನಿನ್ನೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಹೀಗಾಗಿ ಚಿನ್ನದ ರಥ ತಯಾರಿ, ವಿನ್ಯಾಸದ ಬಗ್ಗೆ ಚರ್ಚೆ ನಡೆಸಿದ್ದು, ಚಿನ್ನದ ರಥ ತಯಾರಿಸಲು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಸಿಎಂಗೆ ಗುರೂಜಿ ಅಭಿನಂದನೆ ಸಲ್ಲಿಸಿದ್ದಾರೆ. ಸಾರ್ವಜನಿಕರ ಹಣವನ್ನು ವ್ಯಯಿಸದೆ ದೇಣಿಗೆ ಪಡೆದು ರಥ ನಿರ್ಮಿಸುವಂತೆ ರಾಜಗುರು ಸಲಹೆ ನೀಡಿದ್ದು, ರಾಜಕೀಯ ವಿಚಾರವಾಗಿಯೂ ಗುರೂಜಿ ಸಲಹೆ ನೀಡಿದ್ದಾರೆ. ಇನ್ನು ಮಂಡ್ಯ ಫಲಿತಾಂಶದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ ಎಂದು ಸಿಎಂಗೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 80 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಚಿನ್ನದ ರಥ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ನಿನ್ನೆ ಅನುಮೋದನೆ ನೀಡಿದೆ. ದೇವಾಲಯಕ್ಕೆ 240 ಕೆಜಿ ಚಿನ್ನದಿಂದ 15 ಕೋಟಿ ರೂ. ಅಂದಾಜು ವೆಚ್ಚದಲ್ಲಿ ರಥ ನಿರ್ಮಿಸಿ ಅರ್ಪಿಸುವ ಯೋಜನೆಗೆ ಸರ್ಕಾರ 2005 ರ ಆಗಸ್ಟ್ ತಿಂಗಳಲ್ಲೇ ಅನುಮೋದನೆ ನೀಡಿತ್ತು. ನಂತರ ಈ ಯೋಜನೆ ನನೆಗುದಿಗೆ ಬಿದ್ದಿತ್ತು.
ದೇವಸ್ಥಾನದ ಭಕ್ತರು ಇತ್ತೀಚೆಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಹಿಂದಿನ ಸರ್ಕಾರಿ ಆದೇಶಗಳನ್ನು ಹಾಜರುಪಡಿಸಿ ಯೋಜನೆಗೆ ಮತ್ತೆ ಚಾಲನೆ ನೀಡುವಂತೆ ಮನವಿ ಮಾಡಿದ್ದರು. ಹೀಗಾಗಿ, ಈಗಿನ ಮಾರುಕಟ್ಟೆ ದರದಲ್ಲಿ ಚಿನ್ನದ ದರ, ನಿರ್ಮಾಣ ವೆಚ್ಚ ಎಲ್ಲ ಅಂದಾಜುಗಳನ್ನೂ ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದರು.