ಬೆಂಗಳೂರು: ಕಾಂಗ್ರೆಸ್ನಲ್ಲಿ ಅಧಿಕಾರ ರಹಿತರಾಗಿ ಕಾಲ ಕಳೆಯುತ್ತಿರುವ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಕನಸು ಕಾಣಲು ಆರಂಭಿಸಿದ್ದಾರೆ.
ವಾರದ ಹಿಂದೆ ತಮ್ಮ ನಿವಾಸಕ್ಕೆ ಆಗಮಿಸಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಜೊತೆ ಸುದೀರ್ಘ ಚರ್ಚೆ ನಡೆಸಿದ್ದ ಇಬ್ರಾಹಿಂ, ಜೆಡಿಎಸ್ ಸೇರುವ ಒಲವು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವ ರೀತಿಯಲ್ಲಿ ಮೂರು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಿವಾಸಕ್ಕೆ ತೆರಳಿ ಇನ್ನೊಂದು ಸುತ್ತಿನ ಸಮಾಲೋಚನೆ ಪೂರ್ಣಗೊಳಿಸಿದ್ದಾರೆ. ಸಿ. ಎಂ. ಇಬ್ರಾಹಿಂ ಜೆಡಿಎಸ್ ಕಡೆ ಒಲವು ತೋರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಳೆದ ವಾರ ಅವರ ನಿವಾಸಕ್ಕೆ ತೆರಳಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಮುಂದಿನ ದಿನಗಳಲ್ಲಿ ಪಕ್ಷ ನಿಮಗೆ ಮಹತ್ವದ ಜವಾಬ್ದಾರಿ ನೀಡಲಿದೆ ಎಂಬ ಭರವಸೆ ನೀಡಿದ್ದರು. ಆದರೆ ಇದಾದ ಮರುದಿನವೇ ಇಬ್ರಾಹಿಂ ನೇರವಾಗಿ ದೇವೇಗೌಡರನ್ನು ಭೇಟಿಯಾಗಿರುವುದನ್ನು ಗಮನಿಸಿದರೆ ಇಬ್ರಾಹಿಂ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಮಾತುಕತೆ ಫಲಪ್ರದವಾಗಿಲ್ಲ ಎಂಬ ಅನುಮಾನ ಕಾಡುತ್ತಿದೆ.
ರಾಜ್ಯಾಧ್ಯಕ್ಷರಾಗುವ ಕನಸು :
ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದು, ಅಲ್ಪಸಂಖ್ಯಾತ ಸಮುದಾಯದ ಮತಬ್ಯಾಂಕ್ ಗಿಟ್ಟಿಸಲು ಮುಂದಾಗಿರುವ ಜೆಡಿಎಸ್ ನಾಯಕರು, ಅಲ್ಪಸಂಖ್ಯಾತ ಸಮುದಾಯಕ್ಕೆ ಆಯಕಟ್ಟಿನ ಸ್ಥಾನ ನೀಡಿ ಗೌರವಿಸಲು ಮುಂದಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಸದ್ಯ ಸಕ್ರಿಯವಾಗಿ ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಇವರು ಸಹ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಬಿಜೆಪಿ ಇಲ್ಲವೇ ಕಾಂಗ್ರೆಸ್ನತ್ತ ಮುಖ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಓದಿ: ಬೆಂಗಳೂರಲ್ಲಿ ಸಿಐಡಿ ಡಿಎಸ್ಪಿ ನೇಣಿಗೆ ಶರಣು
ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಬದಲಾವಣೆ ತರಲು ಮುಂದಾಗಿರುವ ಹೆಚ್.ಡಿ. ಕುಮಾರಸ್ವಾಮಿ ಹಲವು ಸ್ಥಾನಗಳಿಗೆ ಪ್ರಮುಖ ನಾಯಕರನ್ನು ನೇಮಿಸಲು ತೀರ್ಮಾನಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಇಬ್ರಾಹಿಂ ಈ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಜೊತೆ ಸುದೀರ್ಘ ಚರ್ಚೆ ನಡೆಸಿದ್ದು, ಒಂದೊಮ್ಮೆ ರಾಜ್ಯಾಧ್ಯಕ್ಷ ಹುದ್ದೆ ನೀಡುವುದಾದರೆ ತಾವು ಜೆಡಿಎಸ್ಗೆ ಬರಲು ಸಿದ್ಧ ಎಂದಿದ್ದಾರೆ ಎಂಬ ಮಾಹಿತಿ ಇದೆ.
ತವರಿನತ್ತ ಮುಖ ಮಾಡಿದ ಇಬ್ರಾಹಿಂ:
ಜನತಾಪರಿವಾರ ಮೂಲದವರಾದ ಇಬ್ರಾಹಿಂ ಮತ್ತೆ ತವರಿನತ್ತ ಮುಖ ಮಾಡಿದ್ದಾರೆ ಎಂಬ ಮಾಹಿತಿ ದಟ್ಟವಾಗಿದ್ದು, ದೇವೇಗೌಡರು ಹಾಗೂ ಐ.ಕೆ. ಗುಜ್ರಾಲ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೆಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 68 ವರ್ಷ ಪ್ರಾಯದ ಹಿರಿಯ ರಾಜಕಾರಣಿ ಸಿ ಎಂ ಇಬ್ರಾಹಿಂ ಸುದೀರ್ಘ ಅವಧಿಯ ರಾಜಕೀಯ ಅನುಭವ ಹೊಂದಿದ್ದು, ಜೆಡಿಎಸ್ ಪಕ್ಷ ಮುನ್ನಡೆಸುವ ಸಾಮರ್ಥ್ಯ ತಮಗಿದೆ. ನಮಗೊಂದು ಅವಕಾಶ ಮಾಡಿಕೊಡಿ ಎಂದು ದೇವೇಗೌಡರ ಬಳಿ ಕೋರಿದ್ದಾರೆ. ಈ ಸಂಬಂಧ ಆದಷ್ಟು ಬೇಗ ಪಕ್ಷದ ಇತರ ನಾಯಕರ ಜೊತೆ ಚರ್ಚಿಸಿ ತೀರ್ಮಾನ ತಿಳಿಸುವುದಾಗಿ ಕೂಡ ಗೌಡರು ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಇದೆ.
ಓದಿ: ದೇವೇಗೌಡರನ್ನು ಭೇಟಿ ಮಾಡಿದ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ
ಸಿದ್ದರಾಮಯ್ಯರಿಂದ ವಿಮುಖ:
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾದ ಇವರು 2008ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. 2018ರಲ್ಲಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದ್ದು, ಇದಕ್ಕೂ ಮುನ್ನ ಅವರನ್ನು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ಕೂಡ ರಾಜ್ಯ ಕಾಂಗ್ರೆಸ್ ನೇಮಕ ಮಾಡಿತ್ತು. ಆದರೆ ಸಿದ್ದರಾಮಯ್ಯ ಕರೆಯ ಮೇರೆಗೆ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾದ ಸಂದರ್ಭದಲ್ಲಿದ್ದ ನಿರೀಕ್ಷೆ ಈಗ ಅವರಿಗೆ ಉಳಿದಿಲ್ಲ. ಅಲ್ಲದೆ ಸಿದ್ದರಾಮಯ್ಯ ಜೊತೆ ಆತ್ಮೀಯತೆ ಕೂಡ ಕಡಿಮೆ ಆಗಿದೆ. ನೇರವಾಗಿಯೇ ಒಂದೆರಡು ಬಾರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ನಲ್ಲಿ ಉಳಿದರೆ ಕೇವಲ ಎಂಎಲ್ಸಿ ಆಗಿ ಮಾತ್ರ ಉಳಿಯುತ್ತೇನೆ. ಜೆಡಿಎಸ್ನಲ್ಲಿ ಇದಕ್ಕಿಂತ ಉನ್ನತ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಅವರು ತೆನೆ ಹೊರಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಸಾಕಷ್ಟು ನಾಯಕರು ಜೆಡಿಎಸ್ ತೊರೆದು ಬಿಜೆಪಿ ಹಾಗೂ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿ ಎಂ ಇಬ್ರಾಹಿಂ ಕೈಗೊಳ್ಳಲು ಮುಂದಾಗಿದ್ದಾರೆ ಎಂಬ ನಿರ್ಧಾರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.