ಬೆಂಗಳೂರು: ರಾಜ್ಯದ ಉಚ್ಛನ್ಯಾಯಾಲಯ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳ ತನಿಖೆಗೆ ಆದೇಶಿಸಿರುವುದನ್ನು ಪತ್ರಿಕಾ ಪ್ರಕಟಣೆ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿಗಳ ಬಗ್ಗೆ ಕಳೆದ ಒಂದೆರಡು ವರ್ಷಗಳಲ್ಲಿ ನಡೆದ ಗುತ್ತಿಗೆ ಕೆಲಸಗಳ ತನಿಖೆ ಮಾಡಬೇಕು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಜೊತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಳಪೆ ಕಾಮಗಾರಿಗಳನ್ನು ಕೂಡ ಎಸಿಬಿ ತನಿಖೆ ವೇಳೆ ಗಣನೆಗೆ ತೆಗೆದುಕೊಳ್ಳಬೇಕು ಹಾಗೂ ಬಿಡಿಎ ಮತ್ತು ಬಿಬಿಎಂಪಿಯಲ್ಲಿ ಅನೇಕ ಕಾಮಗಾರಿಗಳು, ಅದರಲ್ಲೂ ರಸ್ತೆ ಕಾಮಗಾರಿಗಳು ಕಳಪೆಯಾಗಿವೆ. ಅಧಿಕಾರಿಗಳು, ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳುವಂತೆ ಮಾಡುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ತನಿಖೆ ಸಮಗ್ರವಾಗಿರಬೇಕು ಮತ್ತು ಎಸಿಬಿಯು ಆರು ತಿಂಗಳು ಗಡುವಿಗೆ ಕಾಯದೆ ಆದಷ್ಟು ಬೇಗ ವರದಿ ನೀಡಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ.
ಕಳಪೆ ಕಾಮಗಾರಿಗಳು ಯಾವುವು ಎಂದು ಗೊತ್ತಾದರೆ ಅವುಗಳಿಗೆ ಸರ್ಕಾರ ನೀಡುವ ಹಣವನ್ನು ತಡೆಹಿಡಿಯಬಹುದು. ನನ್ನ ಸರ್ಕಾರ ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿಗೆ ಆಸ್ಪದ ನೀಡುವುದಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಬಿಡಿಎ ಮತ್ತು ಬಿಬಿಎಂಪಿ ಕಾಮಗಾರಿಗಳು, ಅದರಲ್ಲೂ ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಅತ್ಯಂತ ವಿಶೇಷವಾಗಿ ಮತ್ತು ಸೂಕ್ಷ್ಮವಾಗಿ ಗಮನಿಸಲಿದೆ ಎಂದು ಮುಖ್ಯಮಂತ್ರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.