ಬೆಂಗಳೂರು: ಬೆಂಗಳೂರು ನಗರದ ಸರ್ಕಾರಿ ಆರೋಗ್ಯ ಸೇವಾ ವ್ಯವಸ್ಥೆಯನ್ನು ಉತ್ತಮ ಪಡಿಸುವ ಅಗತ್ಯವಿದ್ದು, ಇದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿಯೇ ಬೆಂಗಳೂರು ನಗರ ಆರೋಗ್ಯ ಸೇವಾ ವಿಭಾಗವನ್ನು ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯವ್ಯಯ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ರಾಜ್ಯದಲ್ಲಿ ಸಾಮಾನ್ಯ ರೋಗ -ರುಜಿನಗಳಿಗೆ ಉತ್ತಮ ಚಿಕಿತ್ಸೆ ನೀಡುವ ಉದ್ದೇಶದ ಒಟ್ಟು 438 ನಮ್ಮ ಕ್ಲಿನಿಕ್ ಸ್ಥಾಪಿಸಲು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಬೆಂಗಳೂರು ನಗರದಲ್ಲಿ ಆರೋಗ್ಯ ಸೇವಾ ಸೌಲಭ್ಯಗಳನ್ನು ಉನ್ನತೀಕರಿಸಬೇಕಾಗಿದ್ದು, ನಿರ್ವಹಣೆಯಲ್ಲೂ ಸುಧಾರಣೆಯಾಗಬೇಕಿದೆ. ನಗರವು ವೇಗವಾಗಿ ಬೆಳೆಯುತ್ತಿದ್ದು, ಆರೋಗ್ಯ ಸೇವೆಗಳನ್ನೂ ಅದಕ್ಕೆ ಅನುಗುಣವಾಗಿ ಒದಗಿಸಬೇಕಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಂಬಂಧಿಸಿದಂತೆ, ಬೆಂಗಳೂರಿನಲ್ಲಿ 200 ಹಾಗೂ ಇತರ ತಾಲೂಕುಗಳಲ್ಲಿ 238 ನಮ್ಮ ಕ್ಲಿನಿಕ್ಗಳನ್ನು ಸ್ಥಾಪಿಸಲು ಕ್ರಮ ವಹಿಸಿ. ಅಲ್ಲಿ ಜನರ ಸಾಮಾನ್ಯ ರೋಗಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಿ.
ಶುಚಿ ಯೋಜನೆಯಡಿ ಉಚಿತವಾಗಿ ವಿತರಿಸುವ ಸ್ಯಾನಿಟರಿ ಪ್ಯಾಡ್ಗಳನ್ನು ಸ್ವಸಹಾಯ ಸಂಘಗಳಿಂದ ಖರೀದಿಸುವಂತೆ ಸೂಚಿಸಿದರು. ಜೊತೆಗೆ ಈ ಸ್ಯಾನಿಟರಿ ಪ್ಯಾಡ್ ಗಳ ಮಾನದಂಡಗಳ ಕುರಿತು ಸ್ವಸಹಾಯ ಸಂಘಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆಯೂ ಸೂಚಿಸಿದರು.
ನಿಮ್ಹಾನ್ಸ್ ಸಹಯೋಗದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಜಾರಿಗೊಳಿಸುತ್ತಿರುವ ಮೆದುಳಿನ ಆರೋಗ್ಯ ಕಾರ್ಯಕ್ರಮವನ್ನು ಧಾರವಾಡದ ಡಿಮ್ಹಾನ್ಸ್ ಸಹಯೋಗದಲ್ಲಿ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿಯೂ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಇಲಾಖೆಯ ಇತರ ಯೋಜನೆಗಳನ್ನು ಸಹ ನಿಗದಿತ ಕಾಲಾವಧಿಯಲ್ಲಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸೇರಿ ಹಲವರು ಸಭೆಗೆ ಹಾಜರಿದ್ದರು.
ಇದನ್ನೂ ಓದಿ: 2 ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸೂಚನೆ