ಬೆಂಗಳೂರು: ಮುಖ್ಯಮಂತ್ರಿಯಾದ ನಂತರ ಮೊದಲ ವಿದೇಶ ಪ್ರವಾಸಕ್ಕೆ ಬಿ.ಎಸ್.ಯಡಿಯೂರಪ್ಪ ಸಜ್ಜಾಗಿದ್ದು, ಸರ್ಕಾರಿ ಕೆಲಸದ ನಿಮಿತ್ತ ಜನವರಿ 21ರಿಂದ ನಾಲ್ಕು ದಿನಗಳ ಕಾಲ ಸ್ವಿಜರ್ಲ್ಯಾಂಡ್ ಪ್ರವಾಸಕ್ಕೆ ತೆರಳುತ್ತಿದ್ದಾರೆ.
ಜನವರಿ 21ರಿಂದ 24ರವರೆಗೆ ಸ್ವಿಜರ್ಲ್ಯಾಂಡ್ನ ಡಾವಾಸ್ ಕ್ಲಾಸ್ಟರ್ಸ್ನಲ್ಲಿ ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರದ ಸಚಿವರ ಜೊತೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳು ಕೂಡ ಭಾಗವಹಿಸಲಿರುವ ಸಭೆಗೆ ಮಧ್ಯಪ್ರದೇಶ, ಪಂಜಾಬ್ ಮತ್ತು ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ.
ಅಧಿಕೃತ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಿಜರ್ಲ್ಯಾಂಡ್ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದು, 21ರಿಂದ ನಾಲ್ಕು ದಿನ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ವಿದೇಶ ಪ್ರವಾಸ ಬಹುತೇಕ ಅಂತಿಮಗೊಂಡಿದ್ದು, ಅಧಿಕೃತ ಪ್ರಕಟಣೆಯಷ್ಟೇ ಬಾಕಿ ಉಳಿದಿದೆ.
ವಿದೇಶ ಪ್ರವಾಸಕ್ಕೂ ಮುನ್ನ ದೆಹಲಿಗೆ ತೆರಳಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಪ್ರವಾಸಕ್ಕೂ ಮೊದಲೇ ಸಂಪುಟ ವಿಸ್ತರಣೆ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.