ಬೆಂಗಳೂರು: ಸಿಎಂ ಯಡಿಯೂರಪ್ಪ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವೆಂಕಟಾಚಲ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಸಂತಾಪ ಸೂಚಿಸಿದ್ರು.
ಬಳಿಕ ಮಾತನಾಡಿದ ಸಿಎಂ, 2001ರಲ್ಲಿ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ವೆಂಕಟಾಚಲ ಜನರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನ ಮಾಡಿದ್ದರು. ಲೋಕಾಯುಕ್ತರಾದ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಗೆ ಪ್ರವಾಸ ಮಾಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಹಾಗೆಯೇ ಭ್ರಷ್ಟಾಚಾರದಲ್ಲಿ ತೊಡಗಿದ ಕೆಲ ಅಧಿಕಾರಿಗಳ ಮೇಲೆ ಸ್ವತಃ ತಾವೇ ಸ್ವಯಂಪ್ರೇರಿತರಾಗಿ ದಾಳಿ ನಡೆಸಿದರು. ಅವರ ಕೊಡುಗೆಯನ್ನು ನಾನು ಸ್ಮರಿಸುತ್ತೇನೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಿಎಂ ಕಂಬನಿ ಮಿಡಿದರು.
ವೆಂಕಟಾಚಲ ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಅವರನ್ನು ಕಳೆದುಕೊಂಡ ಕುಟುಂಬದವರಿಗೆ ದೇವರು ದು:ಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿ ಧೈರ್ಯ ತುಂಬಿದ್ರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಮಿಸಿದ್ದು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಕರ್ನಾಟಕದ ಸಮಾಜ, ನ್ಯಾಯಾಲಯ, ಲೋಕಾಯುಕ್ತ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವರು ವೆಂಕಟಾಚಲ. ಲೋಕಾಯುಕ್ತ ಸಂಸ್ಥೆಗೆ ಶಕ್ತಿ ತುಂಬಿ ಭ್ರಷ್ಟಾಚಾರ ವ್ಯವಸ್ಥೆ ರಾಜ್ಯದಲ್ಲಿ ಎಷ್ಟಿದೆ ಎಂದು ತೋರಿಸಿ ಕೊಟ್ಟಿದ್ದಾರೆ ಎಂದು ಗುಣಗಾನ ಮಾಡಿದರು.