ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸಂಜೆ ಕಾಂಗ್ರೆಸ್ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್, ಸಚಿವ ಜಮೀರ್ ಅಹಮ್ಮದ್ ಪಾಲ್ಗೊಂಡಿದ್ದರು.
ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಅನ್ನೋದರ ಬಗ್ಗೆ ನಾಳೆ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇಂದು ಕೇವಲ ಪ್ರಾಥಮಿಕ ಹಂತದ ಚರ್ಚೆ ಮಾತ್ರ ನಡೆದಿದೆ. ನಾಳೆ ರಾಜ್ಯಕ್ಕೆ ಕೆ.ಸಿ. ವೇಣುಗೋಪಾಲ್ ಬರುತ್ತಾರೆ. ಅವರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಅವರ ಸಮ್ಮುಖದಲ್ಲಿ ಸಭೆ ನಡೆಯುವ ಸಂದರ್ಭ ಎಲ್ಲಾ ರಾಜ್ಯ ನಾಯಕರು ಉಪಸ್ಥಿತರಿರುತ್ತಾರೆ ಎಂದರು.
ಕಾಂಗ್ರೆಸ್ನಲ್ಲಿ ಅಸಮಾಧಾನಗೊಂಡಿರುವ ಯಾವುದೇ ಶಾಸಕರು ಇಲ್ಲ. ಸಚಿವ ಸಂಪುಟ ಪುನಾರಚನೆಯನ್ನು ವ್ಯವಸ್ಥಿತವಾಗಿ ಮಾಡಲಿದ್ದು, ಆ ಸಂದರ್ಭದಲ್ಲಿ ಯಾವುದೇ ರೀತಿಯ ಅಸಮಾಧಾನ ತಲೆದೋರುವುದಿಲ್ಲ ಎಂದು ದಿನೇಶ್ ಅಭಿಪ್ರಾಯಪಟ್ಟರು.