ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಲು ಹೆಚ್ಚಿನ ಗಮನ ಹರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದರು.
ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲ ಶಾಲೆಗಳಿಗೆ ಕಟ್ಟಡ, ಮೈದಾನ, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು 4 ಸಾವಿರ ಕೋಟಿ ರೂ. ಬೇಕಾಗಲಿದೆ. ಗ್ರಾಮೀಣ ಭಾಗದಲ್ಲಿ ಶೌಚಾಲಯಗಳ ನಿರ್ವಹಣೆಯನ್ನು ಗ್ರಾಮ ಪಂಚಾಯ್ತಿಗಳಿಗೆ, ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಗೆ ವಹಿಸಲಾಗುವುದು ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಬಾಲಕ-ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯವನ್ನು ನಿರ್ಮಿಸಲಾಗುವುದು. ಒಳ್ಳೆಯ ಕಟ್ಟಡ ಶೌಚಾಲಯ, ಮೈದಾನ, ವಿದ್ಯುತ್ ಸಂಪರ್ಕ ಇರಬೇಕು ಎಂದ ಅವರು, ಗ್ರಾಮ ಪಂಚಾಯ್ತಿಗಳ ಮೂಲಕ ನರೇಗಾ ಯೋಜನೆ ಹಾಗೂ ಸುಭದ್ರ ಶಾಲೆಯಡಿ ಉತ್ತಮ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದರು.
ಶಾಲೆಗಳಲ್ಲಿ ಕಂಪ್ಯೂಟರ್ ಬಳಕೆ ಮಾಡುವುದರಿಂದ ಸ್ಮಾರ್ಟ್ನೆಸ್ ತರಲು ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಉದ್ಯಮಿಗಳೊಂದಿಗೆ ಈಗಾಗಲೇ ದೊಡ್ಡಮಟ್ಟದಲ್ಲಿ ಚರ್ಚೆ ಮಾಡಲಾಗಿದ್ದು, ಸಿಎಸ್ಆರ್ ಯೋಜನೆಯಡಿ ಬೆಂಗಳೂರಿನಲ್ಲಿ ಶೌಚಾಲಯ ನಿರ್ಮಿಸಲು ಬರುತ್ತಾರೆ ಹೊರತು ದೂರದ ಗುಳೇದಗುಡ್ಡದಂತಹ ಹಳ್ಳಿಗೆ ಹೋಗುವುದಿಲ್ಲ ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಶಾಸಕ ಬಂಡೆಪ್ಪ ಕಾಶೆಂಪೂರ್, ರಾಜ್ಯಾದ್ಯಂತ ಒಂದೆರಡು ವರ್ಷಗಳಲ್ಲಿ ಮೂಲಸೌಲಭ್ಯ ಕಲ್ಪಿಸುವುದನ್ನು ಪೂರ್ಣಗೊಳಿಸಿ ನಾವು ಸಹಕಾರ ಕೊಡುತ್ತೇವೆ ಎಂದರು. ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಲಾ ಕಾಲೇಜುಗಳಿಗೆ ಶೌಚಾಲಯ ನಿರ್ಮಿಸಬೇಕು. ಅತ್ಯಂತ ಅವಶ್ಯಕ ಮತ್ತು ನಿರ್ವಹಣೆಯೂ ಆಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಈ ಶೌಚಾಲಯ ನಿರ್ವಹಣೆಯ ಹೊಣೆಯನ್ನು ಪಂಚಾಯ್ತಿಗಳಿಗೆ ಕೊಟ್ಟರೆ ಒಳ್ಳೆಯದು ಎಂದು ಸಲಹೆ ಮಾಡಿದರು. ಕಾಂಗ್ರೆಸ್ ಹಿರಿಯ ಸದಸ್ಯ ಎಚ್.ಕೆ.ಪಾಟೀಲ್ ಮಾತನಾಡಿ, ಉದ್ಯಮಿಗಳ ಸಿಎಸ್ಆರ್ ನಿಧಿ ಹಣ ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಶೌಚಾಲಯ ನಿರ್ವಹಣೆ ಶಿಕ್ಷಣ ಇಲಾಖೆಯಿಂದ ಸಾಧ್ಯವಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ವಹಿಸಬೇಕೆಂದು ಸಲಹೆ ಮಾಡಿದರು. ಮತ್ತೊಬ್ಬ ಸದಸ್ಯ ಆರ್.ವಿ.ದೇಶಪಾಂಡೆ ಮಾತನಾಡಿ, ಕುಡಿಯುವ ನೀರು, ಶೌಚಾಲಯಗಳ ನಿರ್ಮಿಸಲು ಕೈಗಾರಿಕೆಗಳ ಸಿಎಸ್ಆರ್ ನಿಧಿ ಬಳಸಲು ಪ್ರಯತ್ನಿಸಿ ಎಂದು ಸಲಹೆ ನೀಡಿದರು.
ರಾಜ್ಯದ 361 ಸರ್ಕಾರಿ ಪ್ರೌಢಶಾಲೆಗಳನ್ನು ಸರ್ಕಾರಿ ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲು ಮಾಹಿತಿಗಳನ್ನು ಸಂಗ್ರಹಿಸಲಾಗಿದೆ. ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಪ್ರಾರಂಭಿಸುವ ಉದ್ದೇಶವಿದೆ ಎಂದು ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಪ್ರೌಢಶಾಲೆಯಿಂದ ಪದವಿಪೂರ್ವ ಕಾಲೇಜಗಳನ್ನಾಗಿ ಉನ್ನತೀಕರಿಸಲು ಅಗತ್ಯವಿರುವ ಮಾಹಿತಿಯನ್ನು ಕ್ರೋಡೀಕರಿಸಿ ಆರ್ಥಿಕ ಇಲಾಖೆಗೆ ಅನುಮತಿಗೆ ಕಳುಹಿಸಲು ಕ್ರಮ ವಹಿಸಲಾಗಿದೆ. ಕುಮ್ಮಟ ತಾಲ್ಲೂಕಿನ ಸಂತೆಗುಳಿ ಹಾಗೂ ನಾಡುಮ್ಯಾಸ್ಕೇರಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಗಳನ್ನಾಗಿ ಪ್ರೌಢಶಾಲೆಯನ್ನು ಉನ್ನತೀಕರಿಸುವ ಪ್ರಸ್ತಾವನೆ ಇದೆ ಎಂದು ಹೇಳಿದರು.