ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿ ಸರ್ಕಾರ ರಚನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅಸ್ತಿತ್ವ ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸುವ 15 ವಿಧಾನಸಭಾಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಆರಂಭಗೊಂಡಿದೆ.
![Counting of votes for Karnataka by-elections](https://etvbharatimages.akamaized.net/etvbharat/prod-images/eltw5sku8aak6jx_0912newsroom_1575856652_740.jpg)
ರಾಜ್ಯದ ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್.ಪೇಟೆ ಮತ್ತು ಹುಣಸೂರು ಕ್ಷೇತ್ರದಲ್ಲಿ ಕಳೆದ ಡಿಸೆಂಬರ್ 5ರಂದು ಮತದಾನ ನಡೆದಿತ್ತು. ಈ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು.
ಚುನಾವಣೆಯಲ್ಲಿ ಒಟ್ಟು 165 ಅಭ್ಯರ್ಥಿಗಳು ಕಣದಲ್ಲಿದ್ದು, ಈ ಪೈಕಿ 156 ಪುರುಷರು ಮತ್ತು 9 ಮಹಿಳೆಯರಿದ್ದಾರೆ. ಕಾಂಗ್ರೆಸ್-15, ಬಿಜೆಪಿ-15, ಜೆಡಿಎಸ್-12, ಬಿಎಸ್'ಪಿ-2, ಎನ್'ಸಿಪಿ-1, ನೋಂದಾಯಿತ ಪಕ್ಷಗಳಿಂದ-45, ಪಕ್ಷೇತರರು-45 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಉಪ ಚುನಾವಣೆಯಲ್ಲಿ ರಾಣೇಬೆನ್ನೂರಿನ ಮಾಜಿ ಶಾಸಕ ಆರ್ ಶಂಕರ್ ಮತ್ತು ಶಿವಾಜಿನಗರದ ಮಾಜಿ ಶಾಸಕ ರೋಷನ್ಬೇಗ್ ಸ್ಪರ್ಧೆ ಮಾಡಿಲ್ಲ. ಹೊಸಕೋಟೆ, ವಿಜಯನಗರ, ಗೋಕಾಕ್, ಅಥಣಿ, ಕಾಗವಾಡದಲ್ಲಿ ಎದ್ದಿದ್ದ ಬಂಡಾಯದ ಬಿಸಿ ವಲಸೆ ಬಂದು ಬಿಜೆಪಿ ಚಿಹ್ನೆಯಡಿ ಅಖಾಡಕ್ಕಿಳಿದ ಅನರ್ಹರಿಗೆ ಆಘಾತ ಕೊಡುತ್ತೋ ಅಥವಾ ಬಂಡಾಯಕ್ಕೆ ಸೆಡ್ಡು ಹೊಡೆದು ಗೆದ್ದೇ ಬಿಡುತ್ತಾರಾ ಅನ್ನೋ ಪ್ರಶ್ನೆಗಳಿಗೆ ಬೆಳಗ್ಗೆ 11 ಗಂಟೆಯಷ್ಟೊತ್ತಿಗೆ ಬಹುತೇಕ ಸ್ಪಷ್ಟ ಉತ್ತರ ಸಿಗಲಿದೆ.