ಬೆಂಗಳೂರು: ಶಾಲೆಯಿಂದ ಹೊರಗುಳಿದಿರುವ ಮತ್ತು ವಲಸೆ ಬಂದಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅಗತ್ಯ ಶಿಕ್ಷಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶಗಳನ್ನು ಪಾಲಿಸದ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವ ಹೈಕೋರ್ಟ್, ಇದೇ ವಿಚಾರವಾಗಿ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಈ ಸಮಸ್ಯೆ ಸರಿಪಡಿಸಲು ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಗೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಸರ್ಕಾರದ ಅನುಪಾಲನಾ ವರದಿ ಸಲ್ಲಿಸಿದರು. ವರದಿ ಪರಿಶೀಲಿಸಿದ ಪೀಠ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಪಿಐಎಲ್ ವಿಚಾರದಲ್ಲಿ ನ್ಯಾಯಾಲಯ ನೀಡಿರುವ ಯಾವೊಂದು ಆದೇಶವನ್ನು ಸರ್ಕಾರ ಸರಿಯಾಗಿ ಪಾಲಿಸಿಲ್ಲ. ಇದು ನಮಗೆ ಸಲ್ಲಿಸಿರುವ ಅನುಪಾಲನಾ ವರದಿಗಳು ಮತ್ತು ಪ್ರಮಾಣಪತ್ರಗಳಿಂದ ಸ್ಪಷ್ಟವಾಗಿ ಕಂಡುಬರುತ್ತಿದೆ. ಕೋರ್ಟ್ ಕಠಿಣ ಆದೇಶ ಹೊರಡಿಸುವ ಮೊದಲು ಸ್ವತಃ ಅಡ್ವೋಕೇಟ್ ಜನರಲ್ ಖುದ್ದು ಹಾಜರಾಗಿ ವಿವರಣೆ ನೀಡಬೇಕು ಎಂದು ತಾಕೀತು ಮಾಡಿತು.
ನ್ಯಾಯಾಂಗ ನಿಂದನೆ ಎಚ್ಚರಿಕೆ:
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈವರೆಗೆ ನೀಡಿರುವ ಎಲ್ಲಾ ಆದೇಶಗಳ ಪೂರ್ಣ ಅನುಪಾಲನಾ ವರದಿಯನ್ನು ಸಮರ್ಪಕ ದಾಖಲೆಗಳೊಂದಿಗೆ ಫೆ.26 ರ ಒಳಗೆ ಸಲ್ಲಿಸದಿದ್ದರೆ, ಜವಾಬ್ದಾರಿ ಹೊತ್ತಿರುವ ಇಲಾಖಾ ಕಾರ್ಯದರ್ಶಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲಾಗುತ್ತದೆ ಎಂದು ಪೀಠ ಎಚ್ಚರಿಕೆ ನೀಡಿತು.
ಪ್ರಕರಣದ ಹಿನ್ನೆಲೆ:
ರಾಜ್ಯದಲ್ಲಿ ಅಂದಾಜು 70 ಸಾವಿರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಹೈಕೋರ್ಟ್ 2013 ರಲ್ಲಿ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ಹಾಗೂ ಕರ್ನಾಟಕ ಮಕ್ಕಳ ಕಡ್ಡಾಯ ಹಾಗೂ ಉಚಿತ ಶಿಕ್ಷಣ ಹಕ್ಕು ನಿಯಮಗಳು-2012 ನ್ನು ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಮಾಡುವಂತೆ ಸರ್ಕಾರಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ. ಆದರೆ, ಸರ್ಕಾರ ಉಚ್ಚ ನ್ಯಾಯಾಲಯದ ಆದೇಶಗಳನ್ನು ಪಾಲಿಸುವಲ್ಲಿ ವಿಫಲವಾಗಿದೆ. ಹಾಗೆಯೇ, ಹಿಂದಿನ ವಿಚಾರಣೆ ವೇಳೆ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿ, ಕಳೆದ ಜ.25ರ ಒಳಗೆ ಪತ್ತೆ ಹಚ್ಚಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ, ಈವರೆಗೆ ಸಮೀಕ್ಷೆ ನಡೆದಿಲ್ಲ.