ಬೆಂಗಳೂರು: ನಮ್ಮ ಸರ್ಕಾರ ಈಗಾಗಲೇ ಸಾಕಷ್ಟು ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದ್ದರೂ ಬಳ್ಳಾರಿ ಜಿಲ್ಲೆಯ 3 ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ನಿನ್ನೆಯಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಅದರಲ್ಲೂ ಮುಖ್ಯವಾಗಿ ಹೊಸಪೇಟೆ ಸುತ್ತಮುತ್ತ ಕರ್ಫ್ಯೂವನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸರ್ಕಾರದ ಕಟ್ಟುನಿಟ್ಟಿನ ಕ್ರಮದಿಂದ ತಾತ್ಕಾಲಿಕವಾಗಿ ಕೆಲವು ಅಡಚಣೆಗಳಾದರೂ ನಾಡಿನ ಸಮಸ್ತ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಈಗಾಗಲೇ ನಾನು ಬಳ್ಳಾರಿ ಜಿಲ್ಲಾಡಳಿತ, ಪೊಲೀಸ್ ಮತ್ತು ಆರೋಗ್ಯ ಇಲಾಖೆಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಮತ್ತು ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ನಾನು ಖುದ್ದಾಗಿ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ಕೊರೊನಾ ಸೋಂಕಿತರಿಗೆ ಪ್ರತ್ಯೇಕ ವಾರ್ಡ್ಗಳನ್ನು ತೆರೆಯುವುದರೊಂದಿಗೆ ಶಂಕಿತ ವ್ಯಕ್ತಿಗಳಿಗೆ ಪ್ರತ್ಯೇಕ ವಾಸದ ಸೌಲಭ್ಯ ಕಲ್ಪಿಸಲಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.