ಬೆಂಗಳೂರು: ಜಿಕೆವಿಕೆ ಕೋವಿಡ್ ಕೇರ್ ಸೆಂಟರ್ನಲ್ಲಿ ರೋಗಿಗಳು ಸರಿಯಾದ ವ್ಯವಸ್ಥೆ ಇಲ್ಲದೆ ನರಳುವಂತಾಗಿದ್ದು, ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಎಚ್ಚರಿಕೆ ನೀಡಿದ್ದಾರೆ.
ಜಿಕೆವಿಕೆಯಲ್ಲಿ ಸ್ಥಾಪಿಸಲಾಗಿರುವ 712 ಹಾಸಿಗೆಗಳ ಕೋವಿಡ್ ಕೇರ್ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ನಗರದ ಕೋವಿಡ್ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಸೋಂಕಿಗೆ ಹೆದರಿರುವ ವೈದ್ಯರು, ಕಂದಾಯ, ಬಿಬಿಎಂಪಿ ಅಧಿಕಾರಿಗಳ ತೀವ್ರ ನಿರ್ಲಕ್ಷ್ಯದಿಂದ ರೋಗಿಗಳು ನರಕ ಸದೃಶ ಯಾತನೆ ಅನುಭವಿಸುತ್ತಿರುವುದನ್ನು ಕಣ್ಣಾರೆ ಕಂಡು, ಅಧಿಕಾರಿಗಳ ಮೇಲೆ ಗರಂ ಆದರು.
ಚಿಕಿತ್ಸೆ, ಔಷಧೋಪಚಾರ, ಸ್ವಚ್ಛತೆ, ಊಟದ ವ್ಯವಸ್ಥೆ, ಶೌಚಾಲಯದ ನೈರ್ಮಲ್ಯ, ಹಾಸಿಗೆಯ ಮೇಲಿನ ಬಟ್ಟೆ ಬದಲಿಸುವುದೂ ಸೇರಿದಂತೆ ಯಾವುದೇ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ಅಧಿಕಾರಿಗಳು ಮತ್ತು ವೈದ್ಯರ ಅಸಡ್ಡೆಯಿಂದ ರೋಗಿಗಳು ನರಳುವಂತೆ ಆಗಿದೆ. ಇದೆಲ್ಲವನ್ನೂ ಪ್ರತ್ಯಕ್ಷವಾಗಿ ಗಮನಿಸಿದ ಡಿಸಿಎಂ, ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಅಳಲು ತೋಡಿಕೊಂಡ ಸೋಂಕಿತರು:
ಆರೈಕೆ ಕೇಂದ್ರದಲ್ಲೇ ಸೋಂಕಿತರ ಜೊತೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ ಮುಂದೆ ತಮಗಾಗುತ್ತಿರುವ ತೊಂದರೆಗಳನ್ನು ರೋಗಿಗಳು ಎಳೆಎಳೆಯಾಗಿ ಬಿಡಿಸಿಟ್ಟರು. ವೈದ್ಯರು ಒಳಕ್ಕೇ ಬರುತ್ತಿಲ್ಲ. ನಮ್ಮ ಯಾವುದೇ ಸಮಸ್ಯೆಗೂ ಸ್ಪಂದಿಸುತ್ತಿಲ್ಲ. ಪ್ರಶ್ನೆಗಳಿಗೆ ಉತ್ತರ ಕೊಡುತ್ತಿಲ್ಲ. ನಮ್ಮನ್ನು ತೀರಾ ನಿರ್ಲಕ್ಷ್ಯ, ಅಸಡ್ಡೆಯಿಂದ ನೋಡಲಾಗುತ್ತಿದೆ ಎಂದು ಕಣ್ಣೀರು ಹಾಕಿದರು.
ಡಿಸಿಎಂ ಬಂದ ಮೇಲೆ ಬಂದ ವೈದ್ಯೆ!!
ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ನಿಯೋಜನೆಗೊಂಡು ಜಿಕೆವಿಕೆ ಕೋವಿಡ್ ಕೇರ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಡಿಕಲ್ ನೋಡೆಲ್ ಅಧಿಕಾರಿ ಡಾ. ಸೌಮ್ಯಾ ಎಂಬುವರು ಡಿಸಿಎಂ ಭೇಟಿ ವೇಳೆ ಅಲ್ಲಿರಲೇ ಇಲ್ಲ. ಸ್ವಲ್ಪ ಹೊತ್ತಿನ ನಂತರ ಬಂದ ಅವರನ್ನು ಡಿಸಿಎಂ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಜಿಕೆವಿಕೆ ಕೋವಿಡ್ ಕೇಂದ್ರದ ವ್ಯವಸ್ಥಾಪಕ ಅಧಿಕಾರಿ ಆಗಿರುವ ತಹಶೀಲ್ದಾರ್ ಡಾ. ಗಣೇಶ್ ಅವರಿಗೂ ಡಿಸಿಎಂ ತರಾಟೆಗೆ ತೆಗೆದುಕೊಂಡರು. ಇಡೀ ಕೇಂದ್ರದ ಸಂಪೂರ್ಣ ಉಸ್ತುವಾರಿಯೂ ಆಗಿರುವ ಬಿಬಿಎಂಪಿ ಜಂಟಿ ಆಯುಕ್ತ ಅಶೋಕ್ ಅವರಿಗೆ ಡಿಸಿಎಂ ಖಡಕ್ ಎಚ್ಚರಿಕೆ ನೀಡಿದರು.
ಇದೇ ಕ್ಯಾಂಪಸ್ನ ತೋಟಗಾರಿಕಾ ಮಹಾವಿದ್ಯಾಲಯದಲ್ಲಿನ ಮತ್ತೊಂದು ಆರೈಕೆ ಕೇಂದ್ರ ಉತ್ತಮವಾಗಿದ್ದು, ಅಲ್ಲಿನ ವ್ಯವಸ್ಥೆ ಬಗ್ಗೆ ಡಿಸಿಎಂ ತೃಪ್ತಿ ವ್ಯಕ್ತಪಡಿಸಿದರು. ವೈದ್ಯರು, ನರ್ಸ್ಗಳು, ಸ್ವಚ್ಛತಾ ಸಿಬ್ಬಂದಿ, ಊಟ, ಔಷಧಿ, ಚಿಕಿತ್ಸೆ ಯಾವುದರ ಬಗ್ಗೆಯೂ ಅಲ್ಲಿ ದೂರುಗಳು ಬರಲಿಲ್ಲ. ಅಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ಡಿಸಿಎಂ ಮನಸಾರೆ ಶ್ಲಾಘಿಸಿದರು.
ಜ್ಞಾನಭಾರತಿಯಲ್ಲಿ ಆರೈಕೆ ಕೇಂದ್ರ:
ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿಗಳು, ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಸ್ಥಾಪನೆ ಮಾಡಲಾಗಿರುವ ನೂತನ ಕೋವಿಡ್ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇವತ್ತಿನಿಂದಲೇ ರೋಗಿಗಳನ್ನು ಶಿಫ್ಟ್ ಮಾಡಲಾಗುತ್ತಿದೆ. ಇಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದ್ದು, ಈ ಭಾಗದಲ್ಲಿ ಪಾಸಿಟಿವ್ ಬಂದವರನ್ನು ಇಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ:
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡದ, ಪರಿಸ್ಥಿತಿ ದುರ್ಲಾಭ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಈಗಾಗಲೇ ವಿಕ್ರಂ ಆಸ್ಪತ್ರೆ, ಜಯನಗರದ ಅಪೋಲೋ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ಇನ್ನು ಕೆಲ ಆಸ್ಪತ್ರೆಗಳು ರೋಗಿಗಳಿಂದ ದುಬಾರಿ ಶುಲ್ಕ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಜೊತೆಗೆ ಸರ್ಕಾರಕ್ಕೆ ನೀಡಬೇಕಾದ ಶೇ.50ರಷ್ಟು ಬೇಡ್ಗಳನ್ನು ನೀಡದಿರುವ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಂಡಿದೆ. ಇಂಥಹ ಆಸ್ಪತ್ರೆಗಳ ಮಾನ್ಯತೆ ರದ್ದು ಮಾಡುವುದರ ಜೊತೆಗೆ, ಕ್ರಿಮಿನಲ್ ಕೇಸ್ ಕೂಡ ದಾಖಲಿಸಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.