ಬೆಂಗಳೂರು: ಅತೃಪ್ತ ಶಾಸಕರು ಇಂದು ಮತ್ತೊಮೆ ರಾಜೀನಾಮೆ ಸಲ್ಲಿಸಿದ್ದಾರೆ. ಸ್ಪೀಕರ್ ನಡೆ ಸಂಬಂಧ ಶುಕ್ರವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಅನೌಪಚಾರಿಕ ಚರ್ಚೆ ಹಮ್ಮಿಕೊಳ್ಳಲಾಗಿತ್ತು. ರಾಜೀನಾಮೆ ಅಂಗೀಕಾರ ಆಗಲಿದೆ ಎನ್ನುವ ನಂಬಿಕೆಯಲ್ಲಿದ್ದ ಬಿಜೆಪಿ, ಶಾಸಕಾಂಗ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವ ಚಿಂತನೆಯಲ್ಲಿತ್ತು. ಆದರೆ, ಸ್ಪೀಕರ್ ರಾಜೀನಾಮೆ ಅಂಗೀಕರಿಸದ ಕಾರಣ ಶುಕ್ರವಾರ ವಿಧಾನಸಭಾ ಅಧಿವೇಶನದಲ್ಲಿ ಕೈಗೊಳ್ಳಬೇಕಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಶಾಸಕಾಂಗ ಸಭೆ ಬಳಿಕ ಮಾತನಾಡಿದ ಯಡಿಯೂರಪ್ಪ, ನಾವು ಯಾವುದೇ ತೀರ್ಮಾನ ಮಾಡಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಕಾಯುತ್ತಿದ್ದೇವೆ. ಇಂದು ರಾಜೀನಾಮೆ ಸಲ್ಲಿಸಿರುವ ಬಗ್ಗೆ ಈಗ ನಾನೇನು ಚರ್ಚೆ ಮಾಡುವುದಿಲ್ಲ ಎಂದರು.