ಬೆಂಗಳೂರು: ಆಡುಗೋಡಿಯಲ್ಲಿ ಪೊಲೀಸ್ ಇಲಾಖೆಯ ನೂರು ಎಕರೆ ಜಾಗವಿದ್ದು, ಅಲ್ಲಿ ಮತ್ತೊಂದು ಪೊಲೀಸ್ ಪಬ್ಲಿಕ್ ಶಾಲೆ ಪ್ರಾರಂಭಿಸುವ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಪೊಲೀಸರು, ಕುಟುಂಬದವರಿಗಾಗಿ ಕಲ್ಯಾಣ ಕಾರ್ಯಕ್ರಮ
ಕೋರಮಂಗಲದ ಕೆಎಸ್ಆರ್ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ನೂತನ ಕಟ್ಟಡ, ಸಂಚಾರಿ ಫೋರೆನ್ಸಿಕ್ ಪ್ರಯೋಗಾಲಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಪೊಲೀಸರ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪೊಲೀಸ್ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಪೊಲೀಸರು ಮತ್ತು ಅವರ ಕುಟುಂಬದವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
‘ಪೊಲೀಸರದ್ದು ಸವಾಲಿನ ಕೆಲಸ’
ರಾಷ್ಟ್ರದ ಗಡಿ ಕಾಯುವ ಸೈನಿಕರಿಗೆ ತಮ್ಮ ಶತ್ರುಗಳ ಬಗ್ಗೆ ಅರಿವಿರುತ್ತದೆ. ಆದರೆ, ನಾಡಿನಲ್ಲಿ ಸೇವೆ ಸಲ್ಲಿಸುವ ಪೊಲೀಸರಿಗೆ ಅಂಥ ಮಾಹಿತಿ ಇರುವುದಿಲ್ಲ. ಒಂದು ರೀತಿಯಲ್ಲಿ ಸವಾಲಿನ ಕೆಲಸವನ್ನು ಪೊಲೀಸರು ನಿಭಾಯಿಸಬೇಕಾಗಿದೆ. ನಾಗರಿಕರು ನೆಮ್ಮದಿಯ ಬದುಕು ನಡೆಸಲು ಹಗಲಿರುಳು ಪೊಲೀಸರು ಎಚ್ಚರವಾಗಿದ್ದು, ರಕ್ಷಣೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ನ್ಯಾಯ ವಿಜ್ಞಾನ ಪ್ರಯೋಗಾಲಯ ಉನ್ನತೀಕರಣ: ನ್ಯಾಯ ವಿಜ್ಞಾನ ಪ್ರಯೋಗಾಲಯ ಉನ್ನತೀಕರಿಸಲು ಹೆಚ್ಚು ಆದ್ಯತೆ ನೀಡಲಾಗುವುದು. ಪ್ರಯೋಗಾಲಯಗಳ ವರದಿ ಶೀಘ್ರವೇ ಬರುವಂತೆ ತಂತ್ರಜ್ಞಾನ ಹಾಗೂ ಸಿಬ್ಬಂದಿ ಹೆಚ್ಚಿಸಲಾಗುವುದು ಎಂದೂ ಅವರು ಹೇಳಿದರು.
ಮಾದಕ ವಸ್ತುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಕಟ್ಟುನಿಟ್ಟಿನ ಸೂಚನೆ
ಯುವಕರು ಮಾದಕ ವಸ್ತುಗಳಿಗೆ ಬಲಿಯಾಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಡಾ.ಎ.ಎಸ್.ಎನ್.ಮೂರ್ತಿ ಸೇರಿ ಮತ್ತಿತರು ಉಪಸ್ಥಿತರಿದ್ದರು.
ಇದನ್ನೂ ಓದಿ: ಸೆ.15ರೊಳಗೆ ಎಲ್ಲ ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆಗೆ ಕ್ರಮ: ಸಚಿವ ಬಿ.ಸಿ.ನಾಗೇಶ್