ಬೆಂಗಳೂರು: ಈ ಮೊದಲು ಕೂಡ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ನೀತಿಯೇ ಅವೈಜ್ಞಾನಿಕವಾಗಿದ್ದು, ಜ್ಞಾನ ಕೇವಲ ಒಂದು ವರ್ಗದಿಂದ ಎನ್ನುವಂತೆ ಪ್ರತಿಬಿಂಬಿಸಲಾಗಿದೆ ಎಂದು ಶಿಕ್ಷಣ ತಜ್ಞ ನಿರಂಜನ್ ಆರಾಧ್ಯ ಹೇಳಿದರು. ನಗರದ ಶಾಸಕರ ಭವನ ಸಮ್ಮೇಳನ ಸಭಾಂಗಣದಲ್ಲಿ ನಡೆದ ಆಲ್ ಇಂಡಿಯಾ ಸ್ಟೂಡೆಂಟ್ ಫೆಡರೇಷನ್ ಆಯೋಜನೆ ಮಾಡಿದ್ದ ದುಂಡು ಮೇಜಿನ ಸಭೆಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ನೀತಿ ರೂಪಿಸಲು ಶಿಕ್ಷಣ ತಜ್ಞರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
ಈ ವೇಳೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸುವುದಾಗಿ ಹೇಳಿತ್ತು. ಅದಕ್ಕೆ ಸಮಿತಿಯನ್ನೂ ಕೂಡ ರಚಿಸಿತ್ತು. ಆದರೆ ಅದರಲ್ಲಿ ಶಿಕ್ಷಣ ತಜ್ಞರೇ ಇರಲಿಲ್ಲ ಎಂದು ವ್ಯಂಗ್ಯವಾಡಿದರು. ಈಗಿನ ಹೊಸ ಕಾಂಗ್ರೆಸ್ ಸರ್ಕಾರ ರಾಜ್ಯ ಶಿಕ್ಷಣ ನೀತಿಯನ್ನು ಹೇಗೆ ರೂಪಿಸುತ್ತಾರೆ ಎಂಬುದನ್ನು ನೋಡಬೇಕಿದೆ. ಶಿಕ್ಷಣ ವ್ಯವಸ್ಥೆಯನ್ನು ಸಂವಿಧಾನದ ಆಶಯದಂತೆ ಕಟ್ಟಬೇಕಿದೆ. ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮರ್ಥ, ಪ್ರಾತಿನಿಧಿಕ ಸಮಿತಿ ರಚನೆ ಮಾಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
![Round table meeting organized by All India Student Federation](https://etvbharatimages.akamaized.net/etvbharat/prod-images/24-09-2023/kn-bng-02-round-table-conference-on-education-policy-7210969_24092023170124_2409f_1695555084_1006.jpg)
ಎಸಿ ರೂಮ್ನಲ್ಲಿ ಕುಳಿತುಕೊಂಡು ಮಾತನಾಡಿದವರು ಶಿಕ್ಷಣ ತಜ್ಞರಾಗುವುದಿಲ್ಲ. ಈ ಬಾರಿ ರಾಜ್ಯ ಶಿಕ್ಷಣ ನೀತಿ ರೂಪಿಸುವವರು ಯೋಗ್ಯರಾಗಿರಬೇಕು. ಪ್ರಾಮಾಣಿಕ ಚಿಂತಕರು, ಅಲ್ಪಸಂಖ್ಯಾತರು, ಮಹಿಳೆಯರಿಗೆ ಸಮಿತಿಯಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.