ಬೆಂಗಳೂರು: ಬಿಬಿಎಂಪಿಗೆ ಚುನಾವಣೆ ನಡೆಸುವ ಸಂಬಂಧ ವಾರ್ಡ್ ಸಂಖ್ಯೆ ಹೆಚ್ಚಿಸಲು ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಪರಿಗಣಿಸಬಾರದು, ಹಾಲಿ ಇರುವ ವಾರ್ಡ್ಗಳಿಗೆ ಚುನಾವಣೆ ನಡೆಸಲು ನಿರ್ದೇಶಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ಮನವಿ ಮಾಡಿದೆ.
ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸಲು ಕೋರಿ ಪಾಲಿಕೆ ಮಾಜಿ ಸದಸ್ಯ ಶಿವರಾಜ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದಿಸಿ, ಪಾಲಿಕೆಯ ವಾರ್ಡ್ಗಳ ಸಂಖ್ಯೆಯನ್ನು 198ರಿಂದ 250 ಹೆಚ್ಚಿಸಲು ಅವಕಾಶವಿರುವ ಕೆಎಂಸಿ ಕಾಯ್ದೆ ತಿದ್ದುಪಡಿಯನ್ನು ಪರಿಗಣಿಸದಂತೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಬೇಕು.
ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸಲು ಅವಕಾಶ ನೀಡಿದರೆ ಸದ್ಯಕ್ಕೆ ಚುನಾವಣೆ ನಡೆಸಲಾಗದು. ಆದ್ದರಿಂದ ಹಾಲಿ ಇರುವ 198 ವಾರ್ಡ್ಗಳಿಗೆ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ಅಲ್ಲದೆ, ವಾರ್ಡ್ ಮರು ವಿಂಗಡನೆ ಅಧ್ಯಯನಕ್ಕೆ ನೇಮಿಸಿರುವ ಆಯೋಗಕ್ಕೆ 6 ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಅವಧಿಯ ನಂತರವೂ ಆಯೋಗದ ವರದಿ ಆಧರಿಸಿ ಮತ್ತೆ ಮೀಸಲು ಹಾಗೂ ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಎಲ್ಲಾ ಕಾರ್ಯಗಳು ಪೂರ್ಣಗೊಳ್ಳಲು ವರ್ಷಕ್ಕೂ ಹೆಚ್ಚು ಸಮಯ ಹಿಡಿಯಲಿದೆ ಎಂದು ವಿವರಿಸಿದರು. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದ ಪೀಠ, ವಿಚಾರಣೆಯನ್ನು ನ.10 ಕ್ಕೆ ಮುಂದೂಡಿತು.