ಬೆಂಗಳೂರು: ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾವಕಾಶಕ್ಕೆ ಕೊನೆಯ ದಿನಾಂಕವನ್ನು ಸುಪ್ರೀಂಕೋರ್ಟ್ ನವೆಂಬರ್ 30ರವರೆಗೆ ವಿಸ್ತರಿಸಿದೆ. ಎಐಸಿಟಿಇ ನಿಗದಿ ಮಾಡಿದ್ದ ದಿನಾಂಕದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಾತಿಗೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು.
ವಿದ್ಯಾರ್ಥಿಗಳ ಅನುಕೂಲತೆ ದೃಷ್ಟಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮನವಿ ಪುರಸ್ಕರಿಸಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಡ್ಮಿಶನ್ಗೆ ಹೆಚ್ಚಿನ ಕಾಲಾವಕಾಶ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
ಪ್ರವೇಶಾತಿ ದಿನಾಂಕ ವಿಸ್ತರಣೆಯಿಂದ ಕೆಇಎಗೆ ಒಂದು ತಿಂಗಳಿಗಿಂತ ಹೆಚ್ಚು ಕಾಲಾವಕಾಶ ಸಿಕ್ಕಿದೆ. ಈ ಅವಧಿಯಲ್ಲಿ ಸುಗಮ ಕೌನ್ಸೆಲಿಂಗ್ ಸೇರಿದಂತೆ ಪ್ರವೇಶ ಪ್ರಕ್ರಿಯೆ ಮುಗಿಸಲಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷ ಪಿಯುಸಿ ಪಾಸಾದ 24 ಸಾವಿರ ಅಭ್ಯರ್ಥಿಗಳು ಈ ವರ್ಷ ಸಿಇಟಿ ಬರೆದು, ರ್ಯಾಂಕಿಂಗ್ ನೀಡುವ ವಿಚಾರದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಸ್ವಲ್ಪ ಅಡಚಣೆ ಎದುರಾಯಿತು. ಹೀಗಾಗಿ ಅಂತಿಮ ದಿನಾಂಕ ವಿಸ್ತರಿಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಕೇಳಿಕೊಂಡಿದ್ದೆವು ಎಂದು ಅವರು ವಿವರಿಸಿದ್ದಾರೆ.
ಇದನ್ನೂ ಓದಿ: ಟ್ವಿಟರ್ ಖಾತೆ ರದ್ದು ಪ್ರಶ್ನಿಸಿದ್ದ ಅರ್ಜಿ: ಮುಚ್ಚಿದ ಲಕೋಟೆಯಲ್ಲಿನ ಮಾಹಿತಿ ಪರಿಶೀಲಿಸಿದ ಹೈಕೋರ್ಟ್