ಬೆಂಗಳೂರು: ಇಂದಿನ ಸಭೆಯಲ್ಲಿ ರಾಜ್ಯ, ರಾಷ್ಟ್ರದ ಪ್ರಸಕ್ತ ವಿದ್ಯಮಾನಗಳು ಹಾಗೂ ಉಪಚುನಾವಣೆ ಬಗ್ಗೆ ಸೌಹಾರ್ದಯುತವಾಗಿ ಮಾತುಕತೆ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾವುದೇ ಭಿನ್ನಮತ ಇಲ್ಲದೆ ಸಭೆ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್ ಪಿ ಜಿ ಭದ್ರತೆ ಹಿಂಪಡೆಯಲಾಗಿದೆ. ಆರ್ಥಿಕ ಸ್ಥಿತಿ ಕುಸಿದಿದೆ, ಉದ್ಯೋಗ ಸಿಗುತ್ತಿಲ್ಲ. ಆದ್ದರಿಂದ ಜನವಿರೋಧಿ ನಿಲುವನ್ನು ತೆಗೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ನಮ್ಮ ಪಕ್ಷಕ್ಕೆ ದ್ರೋಹ ಮಾಡಿ ಹೋದವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಹಿರಿಯರು ಸಲಹೆಗಳನ್ನು ನೀಡಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಾಬಿಪ್ರಾಯಗಳಿಲ್ಲ. ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಿರುದ್ಯೋಗ ಸಮಸ್ಯೆ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಹೋರಾಟ ಮಾಡುತ್ತಿದ್ದೇವೆ. ಅನೈತಿಕವಾಗಿ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದಿದೆ. ಪ್ರವಾಹ ಸಂತ್ರಸ್ತರ ಸಮಸ್ಯೆಯನ್ನು ರಾಜ್ಯ ಸರ್ಕಾರ ಪರಿಹರಿಸಿಲ್ಲ, ದೇಶ ಕವಲು ದಾರಿಯತ್ತ ಹೊರಟಿದೆ. ಪ್ರತಿಭಟನೆ ಮೂಲಕ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದು ಖಂಡ್ರೆ ಹೇಳಿದ್ರು.
ಎಲ್ಲಾ ಕಡೆ ನಾವೇ ಗೆಲ್ಲುತ್ತೇವೆ: ಪಕ್ಷದ ಬೆನ್ನಿಗೆ ಚೂರಿ ಹಾಕಿ ನಮ್ಮವರೇ ಹೊರ ಹೋಗಿದ್ದಾರೆ. ಎಲ್ಲ 15 ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ. ಈಗಾಗಲೇ ಕೆಲವು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಉಳಿದ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ರಾಜು ಕಾಗೆ ಹಾಗೂ ಅಶೋಕ್ ಪೂಜಾರಿಗೆ ಬಿಜೆಪಿಯಲ್ಲಿ ಅಸಮಾಧಾನ ಆಗಿರಬಹುದು. ಆದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ತಿಳಿಸಿದರು.