ಬೆಂಗಳೂರು: ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಕೃಷ್ಣ ಅವರ ಅಕಾಲಿಕ ನಿಧನಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೃಷ್ಣ ಅವರ ನಿಧನ ಆಘಾತ ಉಂಟು ಮಾಡಿದೆ ಎಂದಿದ್ದಾರೆ.
ಸರಳ, ಸಜ್ಜನಿಕೆ ಹಾಗೂ ಸೌಮ್ಯ ಸ್ವಭಾವದ ಕೃಷ್ಣ ಅವರು ಕುರುಬರ ಸಂಘದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇತ್ತೀಚೆಗೆ ಸಂಘದ ಅಧ್ಯಕ್ಷರಾಗಿ ಚುನಾಯಿತರಾಗಿದ್ದ ಅವರು ಸಂಘದ ಕಾರ್ಯ ಚಟುವಟಿಕೆಗಳ ಯೋಜನೆ ಹಾಕಿಕೊಂಡಿದ್ದರು. ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬದವರಿಗೆ ಕೊಡಲಿ ಎಂದು ಸಿದ್ದರಾಮಯ್ಯ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಆಪ್ತ, ಕರ್ನಾಟಕ ಪ್ರದೇಶ ಕುರುಬರ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಳ್ಳಾರಿ ಕೃಷ್ಣ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಕೃಷ್ಣ ಅವರು ಬಳ್ಳಾರಿ ಭಾಗದ ಪ್ರಭಾವಿ ಮುಖಂಡರಾಗಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಅವರು ಸಿದ್ದರಾಮಯ್ಯ ಅವಧಿಯಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ಇಂದು ಇವರ ಅಂತ್ಯ ಸಂಸ್ಕಾರ ಬಳ್ಳಾರಿಯ ಹುಟ್ಟೂರಿನಲ್ಲಿ ನಡೆಯಲಿದೆ.