ಬೆಂಗಳೂರು: ಗಾಂಧಿ ಭವನದಲ್ಲಿ ಕರ್ನಾಟಕ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವ ಮೂಲಕ ಮಹಿಳಾ ಘಟಕ ಕಾರ್ಯಕ್ರಮವನ್ನ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಯಡಿಯೂರಪ್ಪ, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯವನ್ನು ಮುಖ್ಯವಾಹಿನಿಗೆ ತರಬೇಕಿದೆ. ಮಹಿಳಾ ಘಟಕ ಉದ್ಘಾಟನೆ ಆಗಿರೋದು ಸಂತೋಷ ಆಗಿದೆ. ಅಲೆಮಾರಿ ಸಮುದಾಯ ಕೆಲವೊಂದು ಕಾರಣಗಳಿಂದಾಗಿ ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಅಲೆಮಾರಿ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಹಿಂದೆ ಸಿಎಂ ಆಗಿದ್ದಾಗ ನಾನು 25 ಕೋಟಿ ಅನುದಾನ ನೀಡಿದ್ದೆ. ಈ ಬಾರಿಯ ಬಜೆಟ್ನಲ್ಲಿ ಇನ್ನೂ ಹೆಚ್ಚಿನ ಅನುದಾನ ಮೀಸಲಿಡುತ್ತೇನೆ. ಈ ಸಮುದಾಯದ ಅಭ್ಯುದಯಕ್ಕೆ ವಿಶೇಷ ಕಾರ್ಯಕ್ರಮಗಳನ್ನ ರೂಪಿಸುತ್ತೇನೆ. ವಿಶೇಷ ಕಾರ್ಯಕ್ರಮ, ಒಂದೆಡೆ ನೆಲೆ ನಿಲ್ಲಲು ಈ ಸಮುದಾಯಗಳಿಗೆ ವಸತಿ ವ್ಯವಸ್ಥೆಗೆ ಕ್ರಮ, ಉತ್ತಮ ಶಿಕ್ಷಣ, ಉದ್ಯೋಗ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳ ಕಲ್ಯಾಣ ಮತ್ತು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಆರ್.ಇದಾತೆ ಸೇರಿದಂತೆ ಇತರರು ಉಪಸ್ಥಿತರಿದ್ದರು.