ಬೆಂಗಳೂರು : ಮೂರನೇ ದಿನವಾದ ಇಂದು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಉದ್ಯಮಿಗಳು ರಾಜ್ಯದಲ್ಲಿ 10 ಲಕ್ಷ ಕೋಟಿ ರೂ. ಗೂ ಅಧಿಕ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿರುವುದು ನಮ್ಮ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಾರಿ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ ಐದು ಲಕ್ಷ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ನಮ್ಮ ಸರ್ಕಾರದ್ದಾಗಿತ್ತು ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು ಹೂಡಿಕೆ ಮೊತ್ತ ಹಾಗೂ ಪೂರ್ಣ ವಿವರಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಳ್ಳಲ್ಲಿದ್ದಾರೆ.
ರಾಜ್ಯದಲ್ಲಿ ಅಂದಾಜು 10 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತದೆ ಎಂದು ಅಂದಾಜಿಸಲಾಗಿದೆ. ನಮ್ಮ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸಿಗಲಿವೆ ಎಂಬುದೇ ಅತ್ಯಂತ ಸಂತಸದ ವಿಷಯ ಎಂದಿದ್ದಾರೆ.
ಮಾಧ್ಯಮಗಳ ಪಾತ್ರವನ್ನು ಮರೆಯುವಂತಿಲ್ಲ: ಈ ಜಾಗತಿಕ ಹೂಡಿಕೆದಾರರ ಸಮಾವೇಶ ಯಶಸ್ವಿಯಾದುದರ ಹಿಂದೆ ಮಾಧ್ಯಮಗಳ ಪಾತ್ರ ಮರೆಯುವಂತಿಲ್ಲ. ಮೂರು ದಿನಗಳಿಂದ ನಿರಂತರವಾಗಿ ನಮಗೆ ವ್ಯಾಪಕ ಪ್ರಚಾರ ನೀಡಲಾಗಿದೆ. ಪರಿಣಾಮ ಕರ್ನಾಟಕ ಕೈಗಾರಿಕಾ ಕ್ಷೇತ್ರದಲ್ಲಿ ಸಾಧಿಸಿರುವ ಯಶೋಗಾಥೆಯನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೂ ತಲುಪಿಸುವಲ್ಲಿ ಮಾಧ್ಯಮಗಳು ವಹಿಸಿರುವ ಪಾತ್ರವನ್ನು ಶ್ಲಾಘಿಸಿದ್ದಾರೆ.
ಇಂದು ಸಂಜೆ 4 ಗಂಟೆಯ ನಂತರ ಸಮಾರೋಪ ಸಮಾರಂಭ ನಡೆಯಲಿದ್ದು, ಉದ್ಯಮಿಗಳು, ಅಭಿಮಾನಿಗಳು ಹಾಗೂ ತಮ್ಮ ಕುಟುಂಬ- ಸ್ನೇಹಿತರೊಂದಿಗೆ ಆಗಮಿಸಿ ಹೂಡಿಕೆದಾರರ ಸಮಾರೋಪ ಸಮಾವೇಶವನ್ನು ಯಶಸ್ವಿ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಇಂದು ತೆರೆ, ಗಡ್ಕರಿ ಗೈರು