ಬೆಂಗಳೂರು : ರಾಜ್ಯದ ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ 2020-21ನೇ ಸಾಲಿನ ವ್ಯತ್ಯಸ್ಥ ತುಟ್ಟಿಭತ್ಯೆ (ವಿಡಿಎ) ಏರಿಕೆಯ ಮೊತ್ತ ಪಾವತಿಸುವುದನ್ನು ಮುಂದೂಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ವಿಡಿಎ(Variable Dearness Allowance) ಮುಂದೂಡಿದ್ದ ಸರ್ಕಾರದ ಆದೇಶ ಪ್ರಶ್ನಿಸಿ ಕರ್ನಾಟಕ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳ ನೌಕರರ ಒಕ್ಕೂಟ, ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಮತ್ತಿತರ ಸಂಘಟನೆಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ವ್ಯತ್ಯಸ್ಥ ತುಟ್ಟಿ ಭತ್ಯೆ ಪಾವತಿ ಮುಂದೂಡಿ 2020ರ ಜುಲೈ 20ರಂದು ಹೊರಡಿಸಿರುವ ಆದೇಶ ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಅಭಿಪ್ರಾಯ ಕೇಳಿ ಕಾನೂನು ಇಲಾಖೆಗೆ ಪತ್ರ ಬರೆಯಲಾಗಿದೆ, ಆದೇಶ ಹಿಂಪಡೆಯುವ ಕುರಿತಂತೆ ಸೂಕ್ತ ತೀರ್ಮಾನ ಕೈಗೊಳ್ಳಲು ಒಂದಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಹೇಳಿಕೆ ಪರಿಗಣಿಸಿದ ಪೀಠ, ಒಂದೊಮ್ಮೆ ಸರ್ಕಾರದ ಆದೇಶ ಕಾನೂನುಬಾಹಿರ ಎಂದಾದರೆ ತಡೆ ಹಿಡಿದಿರುವ ತುಟ್ಟಿ ಭತ್ಯೆಯ ಮೊತ್ತಕ್ಕೆ ಸರ್ಕಾರವೇ ಬಡ್ಡಿ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
2020-21ನೇ ಸಾಲಿನ ವ್ಯತಸ್ಥ ತುಟ್ಟಿಭತ್ಯೆ ಪಾವತಿಯನ್ನು 2021ರ ಮಾ.31ರವರೆಗೆ ಮುಂದೂಡಿ 2020ರ ಜುಲೈ 20ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಕಾನೂನುಬಾಹಿರವಾಗಿದೆ ಎಂದು ಆರೋಪಿಸಿರುವ ಅರ್ಜಿದಾರರು, ವ್ಯತಸ್ಥ ತುಟ್ಟಿಭತ್ಯೆ ಕನಿಷ್ಠ ವೇತನದ ಅವಿಭಾಜ್ಯ ಅಂಗ ಎಂದು ವಾದಿಸಿದ್ದಾರೆ.
ಕನಿಷ್ಠ ವೇತನ ಕಾಯ್ದೆ ಅಡಿ ಕನಿಷ್ಠ ವೇತನ ನಿಗದಿಪಡಿಸುವುದು ಶಾಸನಾತ್ಮಕ ಕಾರ್ಯ. ಇದನ್ನು ಕಾರ್ಯಕಾರಿ ಆದೇಶದ ಮೂಲಕ ತಡೆ ಹಿಡಿಯಲು ಅಥವಾ ಮುಂದೂಡಲು ಸಾಧ್ಯವಿಲ್ಲ ಎಂಬ ವಿಚಾರವನ್ನ ಹೈಕೋರ್ಟ್ ಪೀಠದೆದುರು ತಂದಿದ್ದಾರೆ. ಅರ್ಜಿದಾರರ ಕೋರಿಕೆ ಪರಿಗಣಿಸಿರುವ ಪೀಠ, 2020ರ ನ.11ರಂದು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
ಇದನ್ನೂ ಓದಿ:ಸೊಸೆ ಉಳಿಸಲು ಹೋಗಿದ್ದೇ ತಪ್ಪಾಯ್ತು.. ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ಅತ್ತೆ