ಬೆಂಗಳೂರು: ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. ಇದನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಹಾಗೂ ಪೌರ ಕಾರ್ಮಿಕರ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಪೌರಕಾರ್ಮಿಕರ ಸಮಸ್ಯೆಗಳನ್ನು ಚರ್ಚಿಸಲು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಈ ಸಮಿತಿಗೆ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದರು. ಇದೇ ವೇಳೆ ಪೌರಕಾರ್ಮಿಕರಿಗೆ ಸಾಮಾಜಿಕವಾಗಿ ಗೌರವ, ಸೌಲಭ್ಯ ಹಾಗೂ ಸುರಕ್ಷತೆ ಅಗತ್ಯ ಎನ್ನುವುದು ಸರ್ಕಾರಕ್ಕೆ ಮನವರಿಕೆಯಾಗಿದೆ ಎಂದರು.
ಸರ್ಕಾರವು ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯತೆಯಿಂದ ಸ್ಪಂದಿಸಲಿದೆ. ಈ ಉದ್ದೇಶದಿಂದಲೇ ಆಯವ್ಯಯದಲ್ಲಿ ಪೌರ ಕಾರ್ಮಿಕರಿಗೆ ಮಾಸಿಕ 2 ಸಾವಿರ ರೂ. ಸಂಕಷ್ಟ ಭತ್ಯೆ ಘೋಷಿಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ಸಿಎಂ ತಿಳಿಸಿದರು.
![ನೇರ ಪಾವತಿ ಪೌರ ಕಾರ್ಮಿಕರ ಸೇವೆ ಕಾಯಂಗೆ ಸರ್ಕಾರದ ಒಪ್ಪಿಗೆ: ಅನುಷ್ಠಾನಕ್ಕೆ ಸಮಿತಿ ರಚನೆ](https://etvbharatimages.akamaized.net/etvbharat/prod-images/15712580_thumbn5555.jpg)
ಇದರೊಂದಿಗೆ ಪೌರಕಾರ್ಮಿಕರ ನೇಮಕಾತಿ ಸರಳೀಕರಣಗೊಳಿಸಲು ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಲಾಗುವುದು ಹಾಗೂ ನೇಮಕಾತಿ ನೀತಿಯನ್ನೂ ಜಾರಿಗೆ ತರಲಾಗುವುದು. ಐಪಿಡಿ ಸಾಲಪ್ಪ ವರದಿ, ಚಂದ್ರಶೇಖರ್ ಸಮಿತಿ ವರದಿ ಹಾಗೂ ರಾಷ್ಟ್ರೀಯ ಕಾನೂನು ಶಾಲೆಯ ವರದಿಗಳನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ಬೇರೆ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಮಾಹಿತಿಯನ್ನೂ ಪಡೆಯಲು ನಿರ್ದೇಶಿಸಲಾಗಿದೆ ಎಂದರು.
ಪೌರ ಕಾರ್ಮಿಕರಿಗೆ ಪ್ರತ್ಯೇಕವಾಗಿ ಗೃಹಭಾಗ್ಯ ಯೋಜನೆ ಜಾರಿಗೊಳಿಸಲು ಹೊಸದಾಗಿ ಮಂಜೂರಾತಿ ನೀಡಲಾಗುವುದು. ಅವರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ರೈತ ವಿದ್ಯಾನಿಧಿ ಮಾದರಿಯಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು. ಪೌರ ಕಾರ್ಮಿಕ ಮಹಿಳೆಯರಿಗೆ ಸರ್ಕಾರಿ ನೌಕರರಿಗೆ ನೀಡುವಂತೆ ಹೆರಿಗೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಸೌಲಭ್ಯ ಒದಗಿಸಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್ನಲ್ಲಿ ಒಂದು ಅಥವಾ ಎರಡು ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲು ಕೂಡ ಸೂಚಿಸಲಾಗಿದೆ ಎಂದೂ ಹೇಳಿದರು.
ಇದನ್ನೂ ಓದಿ: ಪ್ರಧಾನಿ ಮೋದಿ ಹೆಸರಿನ ಮೇಲೆ ಚುನಾವಣೆ ಎದುರಿಸುತ್ತೇವೆ: ಶಾಸಕ ಯತ್ನಾಳ್