ಬೆಂಗಳೂರು: ನಗರ ಭಾಗಗಳಲ್ಲಿ ಅಗ್ನಿ ದುರಂತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 329 ಕೋಟಿ ರೂ. ವೆಚ್ಚದಲ್ಲಿ 17 ನೂತನ ಅಗ್ನಿಶಾಮಕ ಠಾಣೆ ನಿರ್ಮಾಣ ಹಾಗೂ ವಿವಿಧ ಠಾಣೆಗಳ ಉನ್ನತೀಕರಣಕ್ಕೆ ನಿರ್ಧರಿಸಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಬೇಸಿಗೆಯಲ್ಲಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಅಗ್ನಿ ಶಾಮಕದಳವನ್ನು ಉನ್ನತೀಕರಣಗೊಳಿಸಬೇಕು. ಆಧುನಿಕ ಉಪಕರಣಗಳನ್ನು ಖರೀದಿ ಮತ್ತು ಅಗತ್ಯವಿರುವ ಠಾಣೆಗಳಿಗೆ ಹೆಚ್ಚುವರಿಯಾಗಿ ನೂತನ ವಾಹನಗಳನ್ನು ಖರೀದಿಸಬೇಕು. ಈ ಕೆಲಸಗಳನ್ನು ಫೆಬ್ರವರಿ ಅಂತ್ಯದೊಳಗೆ ಮುಗಿಸಲು ಪ್ರತ್ಯೇಕ ಟೆಂಡರ್ ಕರೆದು ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರವು 15ನೇ ಹಣಕಾಸು ಆಯೋಗದ ಅನ್ವಯ ರಾಜ್ಯದ ಅಗ್ನಿಶಾಮಕ ದಳಕ್ಕೆ 2022-23 ರ ಸಾಲಿನಲ್ಲಿ 329 ಕೋಟಿ ರೂ. ಹಣ ಮಂಜೂರಾಗಿದೆ. ಈ ಹಣದ ಬಳಕೆಗೆ ಸಂಬಂಧಿಸಿದಂತೆ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕ ಕಮಲ್ ಪಂತ್ ಅವರು ಕ್ರಿಯಾ ಯೋಜನೆ ಮಂಡಿಸಿದರು.
329 ಕೋಟಿ ರೂ. ಹಣದ ಪೈಕಿ ನೂತನ ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ 98.97 ಕೋಟಿ ರೂ., ರಾಜ್ಯ ತರಬೇತಿ ಕೇಂದ್ರದ ಉನ್ನತೀಕರಣಕ್ಕೆ 16.49 ಕೋಟಿ ರೂ., ಆಧುನಿಕ ಉಪಕರಣಗಳ ಖರೀದಿಗೆ 148.45 ಕೋಟಿ ರೂ., ನಗರ ಪ್ರದೇಶಗಳಲ್ಲಿ ಅಗ್ನಿಶಾಮಕ ದಳ ಬಲಪಡಿಸಲು 16.50 ಕೋಟಿ ರೂ. ಬಳಸಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ನಗರದ ಭಾಗಗಳಲ್ಲಿ ಇತ್ತೀಚೆಗೆ ಅಗ್ನಿ ದುರಂತಗಳು ಹೆಚ್ಚುತ್ತಿವೆ. ಪ್ರಾಣಾಪಾಯಗಳ ಸಂಖ್ಯೆಯೂ ಹೆಚ್ಚುತ್ತಿವೆ. ಮುಂದಿನ ಬೇಸಿಗೆಯಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಈ ಬಗ್ಗೆ ಜನರಲ್ಲಿ ಮೂಡಿರುವ ಆತಂಕ ದೂರ ಮಾಡಬೇಕು ಎಂದಿದ್ಧಾರೆ.
ಅಗ್ನಿ ಅವಘಡಗಳಲ್ಲಿ ಮಾತ್ರವಲ್ಲದೆ ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ಸಂಭವಿಸಿದಾಗ ಎನ್ಡಿಆರ್ಎಫ್ ತಂಡಕ್ಕೆ ಕಾಯುವ ಮೊದಲು ಅಗ್ನಿಶಾಮಕದಳಗಳು ಜನರ ರಕ್ಷಣೆಗೆ ಮುಂದಾಗಬೇಕು. ಅಗ್ನಿಶಾಮಕ ದಳ ಈವರೆಗೆ ತನ್ನ ಸಿಬ್ಬಂದಿಗಳ ಜೊತೆಗೆ ಸಾವಿರಾರು ಸಾರ್ವಜನಿಕರಿಗೆ, ಸ್ವಯಂಸೇವಕರಿಗೆ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಹೇಗೆ ಕೆಲಸ ಮಾಡಬೇಕು ಎಂದು ತರಬೇತಿ ನೀಡಿದೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ ರಶ್ಮಿ ಮಹೇಶ್, ಅಗ್ನಿಶಾಮಕದಳ ಪೊಲೀಸ್ ಉಪ ಮಹಾನಿರ್ದೇಶಕ ರವಿ ಡಿ. ಚೆನ್ನಣ್ಣನವರ್ ಹಾಗೂ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಜನರ ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಸರ್ಕಾರ: ದರಖಾಸ್ತು ಪೋಡಿ ನಿಯಮದಲ್ಲೇನಿದೆ?