ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಅಧಿಕಾರಿಗಳು ಕಡ್ಡಾಯವಾಗಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೆಲವು ಇಲಾಖೆ ಅಧಿಕಾರಿಗಳು ಈ ವೇಳೆ ಸಭೆ ನಡೆಸುವ ಮೂಲಕ ಸಾರ್ವಜನಿಕರ ಭೇಟಿಗೆ ಅವಕಾಶ ನೀಡದಿರುವ ಬಗ್ಗೆ ಸಾಕಷ್ಟು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ. ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಅಧಿಕಾರಿಗಳು ಯಾವುದೇ ಸಭೆ ನಡೆಸದಂತೆ ಖಡಕ್ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಪ್ರತಿ ದಿನ ಮಧ್ಯಾಹ್ನದ ಸಮಯದಲ್ಲಿ ಯಾವುದೇ ಸಭೆ ನಡೆಸದೆ ಸಾರ್ವಜನಿಕರ ದೂರುಗಳನ್ನು ಆಲಿಸುವಂತೆ ಸೂಚಿಸಲಾಗಿದೆ.
ಅಲ್ಲದೆ ಶಾಸಕರು, ಪರಿಷತ್ ಸದಸ್ಯರು ಹಾಗೂ ಸಂಸದರು ದಿನದ ಯಾವುದೇ ಸಮಯದಲ್ಲಿ ಅಥವಾ ಸಭೆಯ ಮಧ್ಯೆಯೂ ಕ್ಷೇತ್ರದ ಅಭಿವೃದ್ಧಿ ಸಂಬಂಧ ಭೇಟಿಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.