ಬೆಂಗಳೂರು: ಕೋವಿಡ್ ಸೋಂಕಿಗೊಳಗಾಗಿರುವ ಮೂಡುಬಿದಿರೆ ತಾಲೂಕಿನ ಶಿರ್ತಾಡಿಯ ಶಿಕ್ಷಕಿ ಎನ್.ಪದ್ಮಾಕ್ಷಿ ಅವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಮತ್ತು ಆ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಕ ದಂಪತಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ತಿಳಿದ ಕೂಡಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸರ್ಕಾರದ ಸೂಚನೆಯನ್ವಯ ಶಿಕ್ಷಕಿ ಪದ್ಮಾಕ್ಷಿಯವರ ಪುತ್ರಿ ಕುಮಾರಿ ಐಶ್ವರ್ಯಳನ್ನು ಸಂಪರ್ಕಿಸಿ ತಮ್ಮ ತಾಯಿಯ ಚಿಕಿತ್ಸೆ ಕುರಿತು ಸರ್ಕಾರ ಪೂರ್ಣ ಕಾಳಜಿ ವಹಿಸಲಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಸಾಂತ್ವನ ಹೇಳಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸಹ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ, ಸದರಿ ಶಿಕ್ಷಕಿಯ ಚಿಕಿತ್ಸೆಗೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆಂದು ಸಚಿವರು ಮಾಹಿತಿ ನೀಡಿದ್ದಾರೆ.
ಆಸ್ಪತ್ರೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿರುವ ದ.ಕ ಜಿಲ್ಲಾಧಿಕಾರಿ, ರೋಗಿಯ ಕಡೆಯಿಂದ ಯಾವುದೇ ರೀತಿಯ ಹಣ ಪಡೆಯದೆ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ. ಅಲ್ಲದೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.